ದೇವೇಗೌಡ ನನ್ನ ವಿರುದ್ಧ ಸ್ಪರ್ಧಿಸಿದರೆ ಹೆದರಲ್ಲ: ಡಿ.ವಿ.ಸದಾನಂದ ಗೌಡ

Update: 2019-03-15 16:18 GMT

ಬೆಂಗಳೂರು, ಮಾ.15: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನನ್ನ ವಿರುದ್ಧ ಸ್ಪರ್ಧಿಸಿದರೆ ನಾನು ಹೆದರುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಶುಕ್ರವಾರ ಕೆ.ಆರ್.ಪುರ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರ ಬಗ್ಗೆ ವೈಯಕ್ತಿಕವಾಗಿ ನನಗೆ ಗೌರವವಿದೆ. ಆದರೆ, ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ಗೆಲುವು ನನ್ನದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯುತ್ತಿದ್ದೇನೆ. ನನ್ನ ವಿರುದ್ಧ ದೇವೇಗೌಡ ಸ್ಪರ್ಧಿಸಿದರೆ ಅದಕ್ಕೆ ನಾನು ಅಂಜುವುದಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರ ಹಿಡಿಯಲಿದ್ದು, ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಅವರು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆ.ಆರ್.ಪುರ ಕ್ಷೇತ್ರದಲ್ಲಿ ನನಗೆ 1.40 ಲಕ್ಷ ಮತಗಳು ಬಂದಿದ್ದವು. ನನ್ನ ಗೆಲುವಿನಲ್ಲಿ ಕೆ.ಆರ್.ಪುರ ಕ್ಷೇತ್ರದ ಮತದಾರರ ಕೊಡುಗೆಯೂ ಹೆಚ್ಚಿದೆ. ಈ ಬಾರಿಯೂ ನನಗೆ ಹೆಚ್ಚಿನ ಮುನ್ನಡೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಸದಾನಂದ ಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎನ್.ಎಸ್.ನಂದೀಶ್ ರೆಡ್ಡಿ, ಶಾಸಕಿ ಪೂರ್ಣಿಮಾ ಕೆ.ಶ್ರೀನಿವಾಸ್, ಬಿಬಿಎಂಪಿ ಮಾಜಿ ಸದಸ್ಯ ಎನ್.ವೀರಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News