ಮಾಜಿ ಶಾಸಕ ಎಚ್.ಡಿ.ಬಸವರಾಜು ಬಿಎಸ್ಪಿ ಸೇರ್ಪಡೆ
ಬೆಂಗಳೂರು, ಮಾ.19: ಕೊಡಗು ಜಿಲ್ಲೆಯ ವಿರಾಜಪೇಟೆಯ ಮಾಜಿ ಶಾಸಕ ಎಚ್.ಡಿ.ಬಸವರಾಜು ಅವರು ಬಹುಜನ ಸಮಾಜವಾದಿ ಪಕ್ಷಕ್ಕೆ(ಬಿಎಸ್ಪಿ) ಮಂಗಳವಾರ ಸೇರ್ಪಡೆಯಾದರು.
ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಚ್.ಡಿ.ಬಸವರಾಜು ಅವರು ಮಾಜಿ ಸಚಿವ ಎನ್.ಮಹೇಶ್, ಬಿಎಸ್ಪಿ ರಾಜ್ಯಾಧ್ಯಕ್ಷ ಪ್ರೊ.ಹರಿರಾಂ, ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಬಳಿಕ ಸುದ್ದಿಗಾರರೊಂದಿಗೆ ಎಚ್.ಡಿ.ಬಸವರಾಜು, ಕೋಮು ಸಂಘರ್ಷದಿಂದ ದೇಶವನ್ನು ರಕ್ಷಿಸಬೇಕೆಂದರೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಪ್ರಧಾನಿಯಾಗ ಬೇಕು ಎಂಬುದು ದೇಶದ ಜನರ ಕೂಗು. ಅವರ ಪಕ್ಷಕ್ಕೆ ಸೇವೆ ಸಲ್ಲಿಸಲು, ಬಿಎಸ್ಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.
ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, ಕರ್ನಾಟಕದಲ್ಲಿ ಬಿಎಸ್ಪಿ ಪಕ್ಷ, ಬೇರೆ ಪಕ್ಷರೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. 28 ಲೋಕಸಭಾ ಕ್ಷೇತ್ರದಲ್ಲೂ ಏಕಾಂಗಿ ಸ್ಪರ್ಧೆ ಮಾಡಲಿದ್ದು, ಶೀಘ್ರದಲ್ಲಿಯೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.