ಬೀದರ್ ಕ್ಷೇತ್ರದಲ್ಲಿ ಅಬ್ದುಲ್ ಮನ್ನಾನ್ ಸೇಠ್ ರಿಗೆ ಟಿಕೆಟ್ ನೀಡಿ: ರಾಹುಲ್ ಗೆ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಪತ್ರ

Update: 2019-03-20 14:05 GMT

ಬೆಂಗಳೂರು, ಮಾ.20: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೀದರ್-7 ಲೋಕಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಅಬ್ದುಲ್ ಮನ್ನಾನ್  ಸೇಠ್ ರಿಗೆ ಟಿಕೆಟ್ ನೀಡಬೇಕು ಎಂದು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದೆ.

(ಅಬ್ದುಲ್ ಮನ್ನಾನ್  ಸೇಠ್)

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಹುಲ್ ರಿಗೆ ಈ ಪತ್ರ ಬರೆಯಲಾಗಿದೆ. ರಾಜಕೀಯ ವಿಚಾರವಾಗಿ ಇತ್ತೀಚೆಗೆ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಮಾರ್ಚ್ 16ರಂದು ಸಮಾಲೋಚನೆ ಸಭೆಯೊಂದನ್ನು ಹಮ್ಮಿಕೊಂಡಿತ್ತು. ಸಭೆಯಲ್ಲಿ ಕೌನ್ಸಿಲ್ ನ ಸದಸ್ಯರು ಹಾಗು ದೇಶಾದ್ಯಂತದ ಪ್ರಮುಖ ಮುಸ್ಲಿಮ್ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರ ಪಾಲ್ಗೊಳ್ಳುವಿಕೆ ಹೇಗೆ ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೆಲ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬೀದರ್ -7 ಲೋಕಸಭಾ ಕ್ಷೇತ್ರದಲ್ಲಿ ಅಬ್ದುಲ್ ಮನ್ನಾನ್ ಸೇಠ್ ರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಅಬ್ದುಲ್ ಮನ್ನಾನ್ ರಿಗೆ ಟಿಕೆಟ್ ನೀಡಬೇಕು ಎಂದು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮಂಝೂರ್ ಆಲಂ ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News