ಭಾರೀ ಅಂತರದಲ್ಲಿ ಜಯ ಸಾಧಿಸುತ್ತೇನೆ: ಮಧು ಬಂಗಾರಪ್ಪ

Update: 2019-03-21 17:25 GMT

ಶಿವಮೊಗ್ಗ, ಮಾ. 21: ಪ್ರಸ್ತುತ ಚುನಾವಣೆಯಲ್ಲಿ ಭಾರೀ ಅಂತರಗಳ ಮತದಿಂದ ಜಯ ಸಾಧಿಸುತ್ತೇನೆ. ಕ್ಷೇತ್ರದ ಮತದಾರರ ಒಲವು ನಮ್ಮ ಕಡೆಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಗುರುವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ಬಾರಿ ಪ್ರಚಾರಕ್ಕೆ ಕಡಿಮೆ ಸಮಯಾವಕಾಶವಿದ್ದ ಕಾರಣ ಕೆಲವೆಡೆ ಜನರನ್ನು ತಲುಪಲು ಆಗಲಿಲ್ಲ. ಈ ಬಾರಿ ಹೆಚ್ಚಿನ ಸಮಯಾವಕಾಶವಿದೆ. ಈಗಾಗಲೇ ಬಹಳಷ್ಟು ಹೋಬಳಿಗಳಲ್ಲಿ ಪ್ರಚಾರ ನಡೆಸಿದ್ದೆನೆ. ಎರಡೂ ಪಕ್ಷದ ನಾಯಕರು-ಕಾರ್ಯಕರ್ತರು ಒಟ್ಟಾಗಿ ಮತದಾರರನ್ನು ತಲುಪುವ ಕಾರ್ಯ ನಡೆಸುತ್ತಿದ್ದಾರೆ. ಕ್ಷೇತ್ರದಾದ್ಯಂತ ಮತದಾರರು ಮೈತ್ರಿಕೂಟದ ಪರವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಕಳೆದ ಉಪ ಚುನಾವಣೆಯಲ್ಲಿ ಪಡೆದ ಮತಕ್ಕಿಂತ, ಭಾರೀ ಮತ ಗಳಿಸುವ ವಿಶ್ವಾಸ ತಮ್ಮದಾಗಿದೆ ಎಂದು ತಿಳಿಸಿದ್ದಾರೆ. 

ಪ್ರಚಾರ: ಚುನಾವಣೆಯಲ್ಲಿ ನಮ್ಮ ಪರವಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಚಾರದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಶಿವಮೊಗ್ಗ ಕ್ಷೇತ್ರದಲ್ಲಿ ಮೈತ್ರಿಕೂಟವು ಅತ್ಯಂತ ಪರಿಣಾಮಕಾರಿಯಾಗಿ ಚುನಾವಣೆ ಎದುರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಹಾಗಾಗಿ ಕ್ಷೇತ್ರದಲ್ಲಿ ಈ ಬಾರಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಉತ್ತಮ ವಾತಾವರಣವಿದೆ ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಮಾತನಾಡಿ, ಗೊಂದಲ ಬದಿಗಿಟ್ಟು ಎರಡೂ ಪಕ್ಷದ ನಾಯಕರು-ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಈ ಬಾರಿ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಜಯ ನಿಶ್ಚಿತವಾಗಿದೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News