×
Ad

ಐಟಿ ಇಲಾಖೆ ಮುಂದೆ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Update: 2019-03-28 20:15 IST

ಬೆಂಗಳೂರು, ಮಾ.28: ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗವಾಗಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಆಪ್ತರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಖಂಡಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐಟಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಿರಿಯ ನಾಯಕರಾದ ಡಾ.ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ಡಿ.ಕೆ.ಶಿವಕುಮಾರ್, ದಿನೇಶ್‌ಗುಂಡೂರಾವ್, ಡಿ.ಸಿ.ತಮ್ಮಣ್ಣ, ಪುಟ್ಟರಾಜು, ಸಾ.ರಾ.ಮಹೇಶ್, ಎಸ್.ಟಿ.ಸೋಮಶೇಖರ್, ಶರವಣ, ನಾರಾಯಣಸ್ವಾಮಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಐಟಿ ಕಚೇರಿ ಮುಂಭಾಗ ಧರಣಿ ನಡೆಸಿ ಕೇಂದ್ರ ಸರಕಾರದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದರು.

ಚೌಕಿದಾರ್ ಚೋರ್ ಹೈ, ಚೌಕಿದಾರ್ ಚೋರ್ ಹೈ, ನರೇಂದ್ರ ಮೋದಿ ಹಠಾವೋ ಭಾರತ್ ಬಚಾವೋ, ಮೋದಿಗೆ ಧಿಕ್ಕಾರ, ಅಮಿತ್ ಶಾಗೆ ಧಿಕ್ಕಾರ ಎಂಬ ಘೋಷಣೆಗಳು ಐಟಿ ಕಚೇರಿ ಮುಂಭಾಗ ಮೊಳಗಿದವು. ಜೆಡಿಎಸ್-ಕಾಂಗ್ರೆಸ್‌ನ ಕಾರ್ಯಕರ್ತರು ಒಟ್ಟಾಗಿ ಪ್ರತಿಭಟನೆ ಮಾಡಿ, ಐಟಿ ಕಚೇರಿ ಬಿಜೆಪಿಯ ಏಜೆಂಟ್ ಅಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕಿಡಿಕಾರಿದರು.

ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ಐಟಿ ದಾಳಿ ನಡೆದಿರುವುದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಮೇರೆಗೆ ಕಾಂಗ್ರೆಸ್, ಜೆಡಿಎಸ್ ಹಾಗೂ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಆಪರೇಷನ್ ಕಮಲದ ಹೆಸರಿನಲ್ಲಿ ಬಿಜೆಪಿ ನಾಯಕರು ನೂರಾರು ಕೋಟಿ ರೂ. ಅಕ್ರಮ ಅವ್ಯವಹಾರ ನಡೆಸಿದ್ದಾರೆ. ಇದರ ಬಗ್ಗೆ ಐಟಿ ಅಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಪ್ರಶ್ನಿಸಿದರು.

ಚುನಾವಣೆ ಬರುತ್ತೆ, ಹೋಗುತ್ತೆ. ಒಂದು ಬಾರಿ ಅಧಿಕಾರಿದಲ್ಲಿರುವ ಪಕ್ಷ, ಮತ್ತೊಂದು ಬಾರಿ ವಿರೋಧ ಪಕ್ಷದಲ್ಲಿರುತ್ತದೆ. ಇವೆಲ್ಲವುಗಳ ನಡುವೆ ಸ್ವತಂತ್ರ ಭಾರತದ ಇತಿಹಾಸದಲ್ಲಿ ಪ್ರಜಾಪ್ರಭುತ್ವ ಸುರಕ್ಷಿತವಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಆಡಳಿತದ ಕಳೆದ ಐದು ವರ್ಷಗಳಲ್ಲಿ ಪ್ರಜಾಪ್ರಭುತ್ವ ನಲುಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.

ಬಿಜೆಪಿಯ ದುರಾಡಳಿತದ ವಿರುದ್ಧ ಇವತ್ತು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗಿದೆ. ಐಟಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗ ಮತ್ತು ನ್ಯಾಯಾಲಯಕ್ಕೆ ದೂರು ನೀಡಲಿದ್ದೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ದೇಶದಲ್ಲಿ ಸುಮಾರು 55 ವರ್ಷಕ್ಕೂ ಹೆಚ್ಚು ಕಾಲ ಅಧಿಕಾರ ನಡೆಸಿದೆ. ಎಂದಿಗೂ ಚುನಾವಣಾ ಸಂದರ್ಭದಲ್ಲಿ ರಾಜಕೀಯ ವಿರೋಧಿಗಳ ವೆುಲೆ ದಾಳಿ ಮಾಡಿರುವ ಒಂದೇ ಒಂದು ನಿದರ್ಶನವಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಎಂಟಿಬಿ ನಾಗರಾಜ್, ಲಕ್ಷ್ಮಿ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ, ಶಿವಣ್ಣ, ಬೈರತಿ ಸುರೇಶ್ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಐಟಿ ಇಲಾಖೆ ನಾಮಫಲಕಕ್ಕೆ ಮಸಿ ಬಳಿಯುವ ಯತ್ನ: ಬಂಧನ

ಕಾಂಗ್ರೆಸ್, ಜೆಡಿಎಸ್ ಸಚಿವ, ಶಾಸಕ, ಆಪ್ತರ ಮನೆಗಳ ಮೇಲೆ ಐಟಿ ದಾಳಿ ಖಂಡಿಸಿ ನಗರದ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ಸಿನ ಎನ್‌ಎಸ್‌ಯುಐನ ಕೆಲವು ಕಾರ್ಯಕರ್ತರು ಐಟಿ ಇಲಾಖೆಯ ನಾಮಫಲಕಕ್ಕೆ ಮಸಿ ಬಳಿಯಲು ಮುಂದಾದರು. ಈ ಸಂದರ್ಭದಲ್ಲಿ ಎಚ್ಚೆತ್ತುಕೊಂಡ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.

ಪ್ರಧಾನಿ ನರೇಂದ್ರ ಮೋದಿಗೆ ಸೋಲಿನ ಭಯ ಕಾಡಿದೆ. ಹೀಗಾಗಿ ಹತಾಶರಾಗಿರುವ ಅವರು ಐಟಿ, ಇಡಿ, ಸಿಬಿಐ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವದ ದಮನ ಹಾಗೂ ಸಂವಿಧಾನ ಬಾಹಿರ ಕೃತ್ಯದಲ್ಲಿ ತೊಡಗಿದ್ದಾರೆ. ಅದರ ಭಾಗವಾಗಿ ಇವತ್ತು ಕಾಂಗ್ರೆಸ್, ಜೆಡಿಎಸ್ ಸಚಿವ, ಶಾಸಕರ ಮನೆಗಳ ಮೇಲೆ ದಾಳಿ ನಡೆದಿದೆ.

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News