ಹೊಸಕೋಟೆ ಜೆಡಿಎಸ್ ಘಟಕದ ಅಧ್ಯಕ್ಷ ಶ್ರೀಧರ್ ನಿವಾಸದ ಮೇಲೆ ಐಟಿ ದಾಳಿ
Update: 2019-04-04 13:01 GMT
ಬೆಂಗಳೂರು, ಎ. 4: ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಸಿಎಂ ಕುಮಾರಸ್ವಾಮಿಯವರ ಆಪ್ತರೆನ್ನಲಾದ ಹೊಸಕೋಟೆ ಜೆಡಿಎಸ್ ಘಟಕದ ಅಧ್ಯಕ್ಷ ಶ್ರೀಧರ್ ಅವರ ನಿವಾಸದ ಮೇಲೆ ನಿನ್ನೆ ಬೆಳಗ್ಗೆ ಐಟಿ ದಾಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನಿನ್ನೆ ಬೆಳಗ್ಗೆ 18ಕ್ಕೂ ಹೆಚ್ಚು ಮಂದಿ ಐಟಿ ಅಧಿಕಾರಿಗಳ ತಂಡ ಹೊಸಕೋಟೆಯಲ್ಲಿನ ಶ್ರೀಧರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆಗೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಗೊತ್ತಾಗಿದೆ.
ಕೆಲ ದಾಖಲೆ ಪತ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನೀಡಲು ನಾಳೆ(ಎ.5) ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವಂತೆ ಶ್ರೀಧರ್ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.