ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸುವುದಿಲ್ಲ: ವಕೀಲರ ವೇದಿಕೆ

Update: 2019-04-09 14:31 GMT

ಬೆಂಗಳೂರು, ಎ.9: ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಮೈಸೂರಿನ ರಾಜಮನೆತನದ ಯದುವೀರ ಕೃಷ್ಣದತ್ತ ಒಡೆಯರ್ ಬೆಂಬಲ ಸೂಚಿಸಿರುವುದನ್ನು ಪ್ರಗತಿಪರ ಚಿಂತನ ವಕೀಲರ ವೇದಿಕೆ ಸ್ವಾಗತಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಬಿ.ಎಸ್.ಜ್ಞಾನಪ್ರಕಾಶ್ ಮಾತನಾಡಿ, ಇತ್ತೀಚಿಗೆ ಸಂಘದ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಮಂಡ್ಯದಲ್ಲಿ ಸುಮಲತಾ ಅವರಿಗೆ ಹಾಗೂ ಬೇರೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ತೀರ್ಮಾನಿಸಲಾಗಿದೆ. ನಮ್ಮ ಸಂಘದ ವಕೀಲರು ಸುಮಲತಾ ಅವರ ಪರವಾಗಿ ಮಂಡ್ಯ, ಮದ್ದೂರು, ಕೆ.ಆರ್.ಪೇಟೆ, ಮಳವಳ್ಳಿ ಹಾಗೂ ಶ್ರೀರಂಗಪಟ್ಟಣದಲ್ಲಿ ವಕೀಲರ ಸಂಘಗಳಿಗೆ ಭೇಟಿ ನೀಡಿ ಮತಯಾಚಿಸಲಿದ್ದೇವೆ ಎಂದು ತಿಳಿಸಿದರು.

ನಮ್ಮ ಸಂಘದೊಂದಿಗೆ ನಿರಂತರವಾಗಿ ಸಂಪರ್ಕವನ್ನಿಟ್ಟುಕೊಂಡಿರುವ ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸುತ್ತಿರುವ ಪಿ.ಸಿ.ಮೋಹನ್, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಬಿ.ಎನ್.ಬಚ್ಚೇಗೌಡ ಹಾಗೂ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿ.ಎಸ್.ಬಸವರಾಜು ಅವರ ಚುನಾವಣಾ ಪ್ರಚಾರದ ಕಾರ್ಯ ಗಳಲ್ಲಿ ಸಂಘದ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಬೆಂಗಳೂರು ದಕ್ಷಿಣಾ ಕ್ಷೇತ್ರದಿಂದ ಸ್ಪರ್ಧಿಸಲು ತೇಜಸ್ವಿನಿ ಅನಂತಕುಮಾರ್ ಅವರಿಗೆ ಬಿಜೆಪಿ ಅವಕಾಶ ನೀಡದಿರುವುದು ನಮ್ಮಲ್ಲಿ ಬೇಸರ ಮೂಡಿಸಿದೆ. ಹೀಗಾಗಿ ಬೆಂಗಳೂರು ದಕ್ಷಿಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಯಾವುದೇ ಪ್ರಚಾರ ನಡೆಸುವುದಿಲ್ಲ. ಅಲ್ಲದೆ ಅವರ ಪ್ರಚಾರದ ಕಾರ್ಯಕ್ರಮದಲ್ಲಿಯೂ ಭಾಗವಹಿಸುವುದಿಲ್ಲ ಎಂದು ತಿಳಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News