ಸತ್ತ ಹೋರಿಯ ಮಾಂಸ ಕತ್ತರಿಸಿದ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು
Update: 2019-04-12 11:56 GMT
ಜಾರ್ಖಂಡ್, ಎ.12: ಸತ್ತ ಹೋರಿಯ ಮಾಂಸ ಕತ್ತರಿಸಿದ್ದಕ್ಕಾಗಿ ಆದಿವಾಸಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟ ವ್ಯಕ್ತಿಯನ್ನು ಪ್ರಕಾಶ್ ಲಾಕ್ರಾ ಎಂದು ಗುರುತಿಸಲಾಗಿದೆ. ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅಂಜನಿ ಕುಮಾರ್ ಝಾ ಮಾಹಿತಿ ನೀಡಿದ್ದಾರೆ.
ಘಟನೆ ಜುರ್ಮಿ ಎಂಬ ಗ್ರಾಮದಲ್ಲಿ ನಡೆದಿದ್ದು, ನಾಲ್ಕು ಜನರು ಸತ್ತ ಹೋರಿಯ ಮಾಂಸ ಕತ್ತರಿಸುತ್ತಿದ್ದಾಗ ಗುಂಪೊಂದು ಅವರ ಮೇಲೆ ದಾಳಿ ನಡೆಸಿತ್ತು. ದಾಳಿಗೆ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.