ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಆರೋಪಿಯ ಬರ್ಬರ ಹತ್ಯೆ

Update: 2019-04-13 18:52 GMT

ಶಿವಮೊಗ್ಗ, ಎ.13: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯ ಸೋಮಿನಕೊಪ್ಪ ಗ್ರಾಮದ ಗೆಜ್ಜೇನಹಳ್ಳಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 

ಹಾಸನ ಜಿಲ್ಲೆ ಅರಸೀಕೆರೆಯ ನಿವಾಸಿ ಪ್ರವೀಣ್ ಯಾನೆ ಕಬಾಬ್ ಪ್ರವೀಣ್ (32) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಈತ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಆಗಮಿಸಿದ ಹಂತಕರು, ಹತ್ಯೆ ನಡೆಸಿ ಪರಾರಿಯಾಗಿದ್ದಾರೆ. 

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಹಂತಕರ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

ಹತ್ಯೆ ಆರೋಪಿ: ಕಳೆದ ಕೆಲ ವರ್ಷಗಳ ಹಿಂದೆ ಆಟೋ ಕಾಂಪ್ಲೆಕ್ಸ್‍ನಲ್ಲಿ ನಡೆದ ಓ.ಸಿ ಬಿಡ್ಡರ್ ಮಧು ಎಂಬಾತನ ಕೊಲೆ ಪ್ರಕರಣದಲ್ಲಿ ಪ್ರವೀಣ್ ಕೂಡ ಆರೋಪಿಯಾಗಿದ್ದ. ಈತನನ್ನು ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಈ ಸಮಯದಲ್ಲಿ ಈತ ಶಿವಮೊಗ್ಗ ನಗರದಲ್ಲಿಯೇ ವಾಸಿಸುತ್ತಿದ್ದ. 

ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ, ಅರಸೀಕೆರೆಯಲ್ಲಿ ನೆಲೆಸಿದ್ದ. ನ್ಯಾಯಾಲಯದಲ್ಲಿನ ವಿಚಾರಣೆಗೆ ಶಿವಮೊಗ್ಗ ನಗರಕ್ಕೆ ಬಂದು ಹೋಗುತ್ತಿದ್ದ. ಈ ವೇಳೆ ಸ್ನೇಹಿತರ ಮನೆಗಳಲ್ಲಿ ತಂಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿಯೇ, ಈ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಹಂತಕರ ಬಂಧನದ ನಂತರವಷ್ಟೆ ಸತ್ಯಾಂಶ ತಿಳಿದುಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News