ಟೆಂಪೊ-ಬೈಕ್ ಢಿಕ್ಕಿ: ಕುಂದಾಪುರ ಹೆಡ್‌ಕಾನ್‌ಸ್ಟೇಬಲ್ ಮೃತ್ಯು

Update: 2019-04-15 17:14 GMT

 ಬ್ರಹ್ಮಾವರ, ಎ.15: ಕುಮ್ರಗೋಡು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಕುಂದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಚಂದ್ರಶೇಖರ(42) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಎ.14ರಂದು ಸಂಜೆ ವೇಳೆ ಉಡುಪಿಯಲ್ಲಿ ಕರ್ತವ್ಯ ಮುಗಿಸಿ ಬ್ರಹ್ಮಾವರ ದಿಂದ ಸಾಸ್ತಾನ ಕಡೆಗೆ ಹೋಗುತ್ತಿದ್ದ ಚಂದ್ರಶೇಖರ್ ಬೈಕಿಗೆ ಹಿಂದಿನಿಂದ ಬಂದ 407 ಟೆಂಪೋ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತ ನಡೆಸಿದ ಟೆಂಪೋ ಚಾಲಕನು ಟೆಂಪೋವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇದರ ಪರಿಣಾಮ ಬೈಕ್ ಸವಾರ ಚಂದ್ರಶೇಖರ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಇದೇ ವೇಳೆ ಮಣಿಪಾಲದಿಂದ ಕುಂದಾಪುರಕ್ಕೆ ಬರುತ್ತಿದ್ದ ಕುಂದಾಪುರ ಠಾಣಾಧಿಕಾರಿ ಹರೀಶ್ ಹಾಗೂ ಸಿಬ್ಬಂದಿ ಕೂಡಲೆೀ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು.

ಆದರೆ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್, ಚಿಕಿತ್ಸೆ ಫಲಕಾರಿ ಯಾಗದೆ ಇಂದು ಬೆಳಗ್ಗೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಗೆ ಎಸ್ಪಿ ನಿಶಾ ಜೇಮ್ಸ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಕುಂದಾಪುರ ಡಿವೈಎಸ್ಪಿ ದಿನೇಶ್ ಕುಮಾರ್ ಭೇಟಿ ನೀಡಿದ್ದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಕುದ್ರು ನಿವಾಸಿಯಾಗಿರುವ ಚಂದ್ರಶೇಖರ್ 1997ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಗೊಂಡಿದ್ದು, ಬೈಂದೂರು, ಕೋಟ, ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಎರಡೂವರೆ ವರ್ಷಗಳಿಂದ ಇವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನಾಳೆ ಇವರ ಅಂತ್ಯಕ್ರಿಯೆ ಉಪ್ಪಿನಕುದ್ರುವಿನಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News