ಜಮ್ಮುಕಾಶ್ಮೀರ: ಮೆಹಬೂಬಾ ಮುಫ್ತಿ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ
Update: 2019-04-15 18:14 GMT
ಶ್ರೀನಗರ, ಎ. 15: ಪ್ರಾರ್ಥನಾ ಸ್ಥಳಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಬೆಂಗಾವಲು ವಾಹನಗಳ ಮೇಲೆ ಜಮ್ಮು ಹಾಗೂ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸೋಮವಾರ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಮೆಹಬೂಬಾ ಮುಫ್ತಿ ಅವರು ಅನಂತ್ನಾಗ್ ಜಿಲ್ಲೆಯ ಖಿರ್ರಾಮ್ನಲ್ಲಿರುವ ಪ್ರಾರ್ಥನಾ ಸ್ಥಳಕ್ಕೆ ಭೇಟಿ ನೀಡಿ ಬಿಜ್ಬೆಹರಾಕ್ಕೆ ಹಿಂದಿರುಗುತ್ತಿರುವ ಸಂದರ್ಭ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಲು ತೂರಾಟದಿಂದ ಮೆಹಬೂಬಾ ಅವರ ಬೆಂಗಾವಲು ವಾಹನಗಳಲ್ಲಿ ಒಂದು ವಾಹನ ಜಖಂಗೊಂಡಿದೆ ಹಾಗೂ ಅದರ ಚಾಲಕನಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಹಬೂಬಾ ಮುಫ್ತಿ ಅವರು ಅನಂತ್ನಾಗ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2014ರಲ್ಲಿ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದರು.