ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; 15 ವಾಹನ, 31 ಲಕ್ಷ ರೂ. ನಗದು ವಶ: ಸಸಿಕಾಂತ್ ಸೆಂಥಿಲ್

Update: 2019-04-16 11:39 GMT

ಮಂಗಳೂರು, ಎ.16: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ಮೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ಮೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು.

ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು.

ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದ ಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News