ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

Update: 2019-04-18 16:02 GMT

ಉಡುಪಿ, ಎ.18: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೆಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೆಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು.

ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು. ಧರ್ಮಾಧ್ಯಕ್ಷರು 12 ಮಂದಿ ಪ್ರೆಷಿತರ(ವಿಶ್ವಾಸಿಗಳು) ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.

ಕಳೆದ ಮೂರು ವರ್ಷಗಳಿಂದ ಪೋಪ್ ಫ್ರಾನ್ಸಿಸ್ ಪಾದ ತೊಳೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರ ಪಾದ ತೊಳೆಯಲು ಅವಕಾಶ ಕಲ್ಪಿಸಿ ಆದೇಶ ನೀಡಿದ್ದರು. ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿ ಪುರುಷರ ಜತೆಗೆ ಮಹಿಳೆಯರು ಸೇರಿದಂತೆ 12 ಮಂದಿ ಪ್ರೇಷಿತರ ಪಾದ ಗಳನ್ನು ಧರ್ಮಾಧ್ಯಕ್ಷರು ಸೇರಿದಂತೆ ಧರ್ಮಪ್ರಾಂತ್ಯದ ಎಲ್ಲ ಚರ್ಚ್‌ಗಳಲ್ಲಿ ಕೂಡ ತೊಳೆಯಲಾಗುತ್ತಿದೆ.

ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿ 12 ವಿಶ್ವಾಸಿಗಳ ಪಾದಗಳನ್ನು ಧರ್ಮಾಧ್ಯಕ್ಷರು ತೊಳೆದರು. ಕ್ಯಾಥೆಡ್ರಲ್‌ನ ಪ್ರಧಾನ ಧರ್ಮಗುರು ವಂ.ಡಾ.ಲೋರೆನ್ಸ್ ಡಿಸೋಜ, ಸಹಾಯಕ ಧರ್ಮಗುರುಗಳಾದ ವಂ.ಕೆನ್ಯೂಟ್ ಮೊದಲಾದವರು ಉಸ್ಥಿತರಿದ್ದರು.

ಪವಿತ್ರ ಗುರುವಾರದಂದು ಯೇಸು ಸ್ವಾಮಿಯು ತನ್ನ 12 ಮಂದಿ ಶಿಷ್ಯ ರೊಂದಿಗೆ ಸೇರಿ ತನ್ನ ಕೊನೆಯ ಭೋಜನ ನಡೆಸಿದ್ದರು. ಈ ವೇಳೆ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ತನ್ನ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಈ ದಿನ ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ನಡೆಯುತ್ತವೆ.

ಪವಿತ್ರ ಗುರುವಾರದ ಬಳಿಕ ಶುಕ್ರವಾರದಂದು ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ್ದು ಶುಕ್ರವಾರವನ್ನು ಕ್ರೆಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ ಹಾಗೂ ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿ ಸುವ ಮೂಲಕ ಆಚರಿಸುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News