ರಾಹುಲ್ ಗಾಂಧಿ ರ‍್ಯಾಲಿಗೆ ಸಿದ್ಧವಾದ ರಾಯಚೂರು

Update: 2019-04-18 18:49 GMT

ರಾಯಚೂರು, ಎ.18: ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ (ಎ.19) ಮಧ್ಯಾಹ್ನ 2 ಗಂಟೆಗೆ ರಾಯಚೂರಿಗೆ ಬರುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಬರುತ್ತಾರೆ. ಅಲ್ಲದೆ, ಕರ್ನೂಲ್ ಮೂಲಕ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬರುತ್ತಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪಮೊಯ್ಲಿ ಹಾಗೂ ಸಚಿವ ವೆಂಕಟರಾವ್ ನಾಡಗೌಡ ಭಾಗವಹಿಸುವರು ಎಂದರು.

ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಈಗಾಗಲೇ ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ. 50 ಸಾವಿರ ಜನರು ಕುಳಿತುಕೊಳ್ಳುವುದಕ್ಕೆ ವ್ಯವಸ್ಥೆಯಾಗಿದೆ ಎಂದು ತಿಳಿಸಿದರು.

ರಾಜಕೀಯದಲ್ಲಿ ವೈಯಕ್ತಿಕ ಟೀಕೆ ಒಳ್ಳೆಯದಲ್ಲ ಎಂದು ಶಾಸಕ ಶಿವನಗೌಡ ನಾಯಕ ಅವರು ಸಿರವಾರದಲ್ಲಿ ಮಾಡಿದ್ದ ಭಾಷಣದ ಬಗ್ಗೆ ಪ್ರಸ್ತಾಪಿಸಿ, ಆ ಮಟ್ಟಕ್ಕಿಳಿದು ಚಾರಿತ್ರವಧೆ ಹೇಳಿಕೆಯನ್ನು ನಾವೂ ನೀಡಬಹುದು. ಆದರೆ, ವೈಯಕ್ತಿಕ ಟೀಕೆಯನ್ನು ಕಾಂಗ್ರೆಸ್ ನಾಯಕರು ಮಾಡುವುದಿಲ್ಲ. ಅದನ್ನು ಜನರು ಗಮನಿಸುತ್ತಾರೆ ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ ಮಾತನಾಡಿ, ಚುನಾವಣೆ ಆಯೋಗಕ್ಕೆ ಬಿಜೆಪಿ ನಾಯಕರು ನೀಡಿರುವ ದೂರುಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಹೇಳಿಕೆಗಳನ್ನು ತಿರುಚುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ನಾನು ಮಾತನಾಡಿದ ಸಂಪೂರ್ಣ ರೆಕಾರ್ಡಿಂಗ್ ನನ್ನ ಬಳಿ ಇದೆ. ಚುನಾವಣೆ ಆಯೋಗಕ್ಕೆ ಸಮರ್ಪಕ ಉತ್ತರವನ್ನು ಸಂದರ್ಭ ಬಂದಾಗ ಒದಗಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಇರಬಗೇರಾ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವಿರೂಪಾಕ್ಷಿ, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶಗೌಡ ಪಾಟೀಲ ಅತ್ತನೂರು, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಪಾರಸಮಲ್ ಸುಖಾಣಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News