'ನಾನು ಸಿಎಂ ಆಗುತ್ತೇನೆ' ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ

Update: 2019-04-19 13:57 GMT

ಬಾಗಲಕೋಟೆ, ಎ. 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇನು ಸನ್ಯಾಸಿಯಲ್ಲ, ಮುಂದಿನ ಚುನಾವಣೆ ಬಳಿಕ ನಾನು ಮುಖ್ಯಮಂತ್ರಿಯಾಗುತ್ತೇನೆಂದು ಹೇಳಿರುವುದು ಸಹಜ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಜಿಲ್ಲೆಯ ತೇರದಾಳದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನರ ಸೇವೆ ಮಾಡಲು ರಾಜಕಾರಣದಲ್ಲಿ ಸ್ಥಾನಮಾನ ಬೇಕಾಗುತ್ತದೆ. ನಾನು ಮುಂದಿನ ಬಾರಿ ಮುಖ್ಯಮಂತ್ರಿಯಾಗುತ್ತೇನೆ ಅಂತ ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

ಪ್ರಧಾನಿ ಮೋದಿ ಅವರದ್ದು ಸುಬ್ಬರಾಯನಕಟ್ಟೆ ಭಾಷಣ. ಬಾಗಲಕೋಟೆಗೆ ಬಂದು ಬಾಲಕೋಟ್ ಬಗ್ಗೆ ಚರ್ಚೆ ಮಾಡಿ ಹೋಗಿದ್ದಾರೆ. ರಾಜ್ಯಕ್ಕೆ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ಅವರು ಪ್ರಧಾನಿಯಾಗಿ ಏನು ಕೊಟ್ಟಿದ್ದಾರೆಂದು ಅವರು ಹೇಳುತ್ತಿಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಸ್ವಾರ್ಥಕ್ಕಾಗಿ ಕುಮಾರಸ್ವಾಮಿ ಕಣ್ಣೀರು ಹಾಕುತ್ತಾರೆಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಹೌದು ನಾನೇನೋ ಕಣ್ಣೀರು ಹಾಕುವ ಮುಖ್ಯಮಂತ್ರಿ. ಭಾವನಾತ್ಮಕ ವಿಚಾರಗಳನ್ನು ಪ್ರಚಾರ ಮಾಡಿ ಮತ ಕೇಳುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News