ಉಡುಪಿ ಜಿಲ್ಲೆಯಾದ್ಯಂತ ವೈಭವದ ಪಾಸ್ಕ ಜಾಗರಣೆ

Update: 2019-04-20 15:21 GMT

ಉಡುಪಿ, ಎ.20: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರಗಿತು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಪಾಸ್ಕ ಜಾಗರಣೆ ಸಂಭ್ರಮದಿಂದ ನಡೆಯಿತು.

ಬೃಹತ್ ಗಾತ್ರದ ಈಸ್ಟರ್ ಕ್ಯಾಂಡಲ್ ಹಚ್ಚಿ ಮೆರವಣಿಗೆಯಲ್ಲಿ ತಂದು, ಚರ್ಚ್ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು. ನಂತರ ನಡೆದ ಬಲಿಪೂಜೆಯಲ್ಲಿ ಯೇಸುವಿನ ಕಷ್ಟಗಳು, ಪುನರುತ್ಥಾನದ ಸಂದೇಶವನ್ನು ವಿವರಿಸಿದ ಧರ್ಮಗುರುಗಳು, ಕ್ರೆಸ್ತ ವಿಶ್ವಾಸ, ಸತ್ಯ ಮರು ದೃಡೀಕರಣ ನಡೆಸಿದರು.

ಬಲಿಪೂಜೆಯ ಬಳಿಕ ಭಾಗವಹಿಸಿದ ಕ್ರೆಸ್ತ ಬಾಂಧವರು ಈಸ್ಟರ್ ಹಬ್ಬದ ಶುಭಾಶಯ ಮಾಡಿ ಸಂಭ್ರಮಿಸಿದರು. ಕ್ರೈಸ್ತರು ವಿಭೂತಿ ಬುಧವಾರದಿಂದ ಆರಂಭಿಸಿ 40 ದಿನಗಳ ಉಪವಾಸ ವ್ರತ ಹಾಗೂ ಧ್ಯಾನದಲ್ಲಿ ಯೇಸುವಿನ ಕಷ್ಟಗಳನ್ನು ನೆನೆದು ಈಸ್ಟರ್ ಹಬ್ಬದಂದು ಯೇಸುವಿನ ಪುನರುತ್ಥಾನಗೊಳ್ಳವುದರ ಮೂಲಕ ತಿಂಗಳ ಕಷ್ಟಗಳ ತಪಸ್ಸಿಗೆ ಕೊನೆ ಹೇಳುತ್ತಾರೆ. ಈಸ್ಟರ್ ಹಬ್ಬವೂ ಕೂಡ ಕ್ರಿಸ್ಮಸ್ ಹಬ್ಬದಂತೆ ಕ್ರೈಸ್ತರಿಗೆ ಪ್ರಮುಖ ಹಬ್ಬವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News