ನೇಕಾರರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ: ಎಚ್.ಕೆ.ಪಾಟೀಲ್
ಗದಗ, ಎ. 21: ರಾಜ್ಯದ ನೇಕಾರರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ನೀಡಿದ್ದಾರೆ.
ರವಿವಾರ ಬೆಟಗೇರಿಯಲ್ಲಿ ನಡೆದ ನೇಕಾರ ಕಾರ್ಮಿಕರ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಬಡಜನತೆಯ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಅಮೂಲ್ಯ ಕೊಡುಗೆಯನ್ನು ನೀಡಿದೆ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಅನುಷ್ಠಾನಗೊಳಿಸಿದ ಖ್ಯಾತಿ ಕಾಂಗ್ರೆಸ್ ಪಕ್ಷದ್ದು. ಕೆ.ಎಚ್. ಪಾಟೀಲರು ನೇಕಾರರ ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಿ ಅಸಂಘಟಿತ ನೇಕಾರರ ಕಲ್ಯಾಣಕ್ಕಾಗಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಅಸಂಘಟಿತ ನೇಕಾರರ ಕಲ್ಯಾಣ ಅವರ ಪ್ರಮುಖ ಗುರಿಯಾಗಿದ್ದನ್ನು ನೆನೆಪಿಸಿಕೊಂಡರು.
ಅಸಂಘಟಿತ ನೇಕಾರರು ಈಗಲೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ದೇಶದ ಭವಿಷ್ಯವನ್ನು ನಿರ್ಧರಿಸುವ ಪ್ರಮುಖ ಚುನಾವಣೆ ನಮ್ಮ ಮುಂದಿದೆ. ಈ ಚುನಾವಣೆಯಲ್ಲಿ ದೇಶದ ಹಿತಕ್ಕೆ ಕೊಡುಗೆಗಳನ್ನು ನೀಡಿರುವ ಪಕ್ಷವಾದ ಕಾಂಗ್ರೆಸ್ ಕೈಬಲಪಡಿಸಬೇಕಾಗಿದೆ ಎಂದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಆರ್.ಪಾಟೀಲ್ ಅವರನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸುವಂತೆ ಮನವಿ ಮಾಡಿದರು.