ವೈದ್ಯಕೀಯ ವೃತ್ತಿ ಸಾರ್ವಜನಿಕ ಸೇವೆಗೆ ಮೀಸಲಿಡಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Update: 2019-04-25 16:13 GMT

ಬೆಳಗಾವಿ, ಎ.25: ವೈದ್ಯಕೀಯ ಪದವಿ ಪಡೆದು ವೃತ್ತಿ ಆರಂಭಿಸಲಿರುವ ಯುವ ಸಮುದಾಯ ಸಮಾಜದಲ್ಲಿ ತುಳಿತಕ್ಕೊಳಗಾದ ಜನರಿಗೆ ಅತ್ಯಂತ ಸಹಾನುಭೂತಿಯಿಂದ ಚಿಕಿತ್ಸೆ ನೀಡಬೇಕು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಕೆ.ಎಲ್.ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ ಸಂಸ್ಥೆಯ 9ನೆ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಅತ್ಯಂತ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಹಣ ಗಳಿಕೆಯ ಬದಲಾಗಿ ಸಾರ್ವಜನಿಕರ ಸೇವೆಗೆ ಮೀಸಲಿಡುವಂತೆ ಸಲಹೆ ನೀಡಿದರು.

ಅತ್ಯುತ್ತಮ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ, ಸೌಲಭ್ಯಗಳು ಸಮಾಜದ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ಕೈಗೆಟುಕುವಂತೆ ಒದಗಿಸಬೇಕು. ಅದೇ ರೀತಿ ವೈದ್ಯಕೀಯ ಕ್ಷೇತ್ರದಲ್ಲಿನ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶಕ್ಕೂ ತಲುಪಿಸುವ ಸವಾಲು ನಮ್ಮ ಮುಂದಿದೆ. ಇದನ್ನು ಯುವ ವೈದ್ಯರು ಆದ್ಯತೆಯ ಮೇರೆಗೆ ಒದಗಿಸಬೇಕು ಎಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸರಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಖಾಸಗಿ ಸಂಸ್ಥೆಗಳು ಕೂಡ ಇದರೊಂದಿಗೆ ಕೈಜೋಡಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಸೌಲಭ್ಯ ಒದಗಿಸಲು ಮುಂದಾಗಬೇಕಿದೆ ಎಂದು ವೆಂಕಯ್ಯ ನಾಯ್ಡು ತಿಳಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆ ಕಾಣುತ್ತಿದೆ. ಇದರಿಂದಾಗಿ ಅನೇಕ ಕಾಯಿಲೆಗಳಿಗೆ ಉತ್ತಮ ಚಿಕಿತ್ಸೆ ಲಭಿಸುತ್ತಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಸಮಾಜದಲ್ಲಿ ತುಳಿತಕ್ಕೊಳಗಾದ ಅಥವಾ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವುದು ಕೇವಲ ಸರಕಾರದಿಂದ ಮಾತ್ರ ಸಾಧ್ಯವಿಲ್ಲ. ಆದುದರಿಂದ, ಖಾಸಗಿಯವರು ಸೇರಿದಂತೆ ಪ್ರತಿಯೊಬ್ಬರೂ ಇದಕ್ಕೆ ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು.

ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ದೈಹಿಕ ಶ್ರಮದ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಅನೇಕ ಬಗೆಯ ಕಾಯಿಲೆಗಳು ಕಂಡುಬರುತ್ತಿವೆ. ಆದುದರಿಂದ, ಯೋಗ ಸೇರಿದಂತೆ ಇತರೆ ದೈಹಿಕಶ್ರಮದ ಕಡೆಗೆ ಒತ್ತು ನೀಡುವಂತೆ ವೆಂಕಯ್ಯ ನಾಯ್ಡು ತಿಳಿಸಿದರು.

ಪಾಶ್ಚಿಮಾತ್ಯ ಜೀವನಶೈಲಿಯ ಅನುಕರಣೆಯಿಂದ ದೇಶಿಯ ಆಹಾರ ಪದ್ಧತಿಯನ್ನು ನಿರ್ಲಕ್ಷಿಸುತ್ತಿರುವುದರಿಂದ ಮಕ್ಕಳು, ಯುವಕರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ನಮ್ಮ ಸಂಸ್ಕೃತಿಯ ಭಾಗವಾಗಿರುವ ರಾಗಿ ಮುದ್ದೆ, ಜೋಳದ ರೊಟ್ಟಿಯಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಸ್ವಚ್ಛ ಭಾರತ ಎಂಬುದು ಕೇವಲ ಸರಕಾರ ಅಥವಾ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಇದು ಸಾಮಾಜಿಕ ಕಾರ್ಯಕ್ರಮವಾಗಿದೆ. ನಾವೆಲ್ಲರೂ ಅದರಲ್ಲೂ ವಿಶೇಷವಾಗಿ ಯುವ ಸಮುದಾಯ ಇದಕ್ಕೆ ಸಹಕರಿಸಬೇಕು ಎಂದು ವೆಂಕಯ್ಯ ನಾಯ್ಡು ಕರೆ ನೀಡಿದರು.

ನಮ್ಮ ಭಾಷೆ ನಮ್ಮ ಅಭಿಮಾನ: ಭಾಷೆ ಮತ್ತು ಭಾವನೆಗಳು ಒಟ್ಟೊಟ್ಟಿಗೆ ಸಾಗುತ್ತವೆ. ಆದುದರಿಂದ, ಮಾತೃಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಇತರೆ ಭಾಷೆಗಳು ಅನಿವಾರ್ಯ. ಆದರೆ ನಮ್ಮ ಮಾತೃ ಭಾಷೆ ನಮ್ಮ ಅಭಿಮಾನವಾಗಬೇಕು ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಒಟ್ಟಾರೆ 23 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಕೆ.ಎಲ್.ಇ.ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಕುಲಪತಿ ಡಾ.ವಿವೇಕ ಸಾವೋಜಿ, ಕುಲಸಚಿವ ಡಾ.ವಿ.ಡಿ.ಪಾಟೀಲ್ ಹಾಗೂ ವಿವಿಧ ಭಾಗಗಳ ಡೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News