×
Ad

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಿನ್ನದ ರಥ: ಸ್ಪಷ್ಟನೆ

Update: 2019-04-29 22:38 IST

ಬೆಂಗಳೂರು, ಎ.29: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನವಾಗಿ ಚಿನ್ನದ ರಥ ನಿರ್ಮಿಸಿ, ಅರ್ಪಿಸುವ ಕುರಿತಂತೆ ಮಾಧ್ಯಮಗಳಲ್ಲಿ ವಿಭಿನ್ನ ವರದಿಗಳು ಪ್ರಕಟ, ಪ್ರಸಾರವಾಗುತ್ತಿದೆ. ಈ ಕುರಿತು ಕೆಲವು ವಾಸ್ತವಾಂಶಗಳು ಇಲ್ಲಿವೆ.

ಈ ಯೋಜನೆಗೆ 2005ರಲ್ಲಿಯೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಅಂದಿನ ದಿನಗಳಲ್ಲಿ 15 ಕೋಟಿ ರೂ.ವೆಚ್ಚದಲ್ಲಿ ಈ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ದೇವಾಲಯದಲ್ಲಿ ಲಭ್ಯವಿರುವ ಚಿನ್ನ ಬಳಸಿಕೊಂಡು ಉಳಿದ ಚಿನ್ನವನ್ನು ಬ್ಯಾಂಕಿನ ಮೂಲಕ ಖರೀದಿಸಲು ಸರಕಾರ ಅನುಮೋದನೆ ನೀಡಿತ್ತು. ಈ ಆದೇಶಗಳಲ್ಲಿ ರಥ ನಿರ್ಮಾಣಕ್ಕೆ ಸರಕಾರದ ಅನುದಾನ ಬಳಸದೆ, ಸಾರ್ವಜನಿಕರ ದೇಣಿಗೆ ಸಂಗ್ರಹ ಹಾಗೂ ದೇವಾಲಯದ ಸಂಪನ್ಮೂಲಗಳಿಂದಲೇ ರಥ ನಿರ್ಮಾಣ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.

ಇತ್ತೀಚೆಗೆ ಶ್ರೀ ಕ್ಷೇತ್ರದ ಭಕ್ತರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಿಂದಿನ ಸರಕಾರಿ ಆದೇಶಗಳನ್ನು ಹಾಜರುಪಡಿಸಿ, ನೆನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದಾರೆ.

ಈ ನಿಟ್ಟಿನಲ್ಲಿ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ ಎಂದು ಅವರು ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News