ಉದ್ಯಮಿ ಮೇಲೆ ಗುಂಡಿನ ದಾಳಿ

Update: 2019-05-04 13:59 GMT

ಬೆಂಗಳೂರು, ಮೇ 4: ಹಣಕಾಸು ವಿಚಾರ ಸಂಬಂಧ ನಗರದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿನ ದಾಳಿ ನಡೆಸಿದ್ದು, ಇಲ್ಲಿನ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ಎಚ್‌ಬಿಆರ್ ಲೇಔಟ್ ನಿವಾಸಿ ಸೈಯದ್ ಝುಬೇರ್ (43) ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉದ್ಯಮಿ ಎಂದು ತಿಳಿದುಬಂದಿದೆ.

ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಸೆಯ್ಯದ್ ಝುಬೇರ್ ಮನೆ ಬಳಿ ನಿಂತಿದ್ದಾಗ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ.

ಈ ವೇಳೆ ಕುಸಿದು ಬಿದ್ದ ಸೈಯದ್‌ನನ್ನು ಸ್ಥಳೀಯರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವೈದ್ಯರು ಸೆಯ್ಯದ್ ಅವರ ಹೊಟ್ಟೆಯಲ್ಲಿ ಹೊಕ್ಕಿದ್ದ ಎರಡು ಗುಂಡುಗಳ ಪೈಕಿ ಒಂದು ಗುಂಡನ್ನು ಶಸ್ತ್ರ ಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಕೆಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News