ಬೆಳಗಾವಿ: ಬೀಜ-ಗೊಬ್ಬರ ಸಮರ್ಪಕ ಹಂಚಿಕೆಗೆ ಜಿಲ್ಲಾಧಿಕಾರಿ ಸೂಚನೆ

Update: 2019-05-08 15:45 GMT

ಬೆಳಗಾವಿ, ಮೇ 8: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜಗಳು ಹಾಗೂ ಅಗತ್ಯ ಗೊಬ್ಬರವನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಒಂದು ವೇಳೆ ಇದಕ್ಕೆ ಸಂಬಂಧಿಸಿದಂತೆ ಏನಾದರೂ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಕೃಷಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬೀಜ-ಗೊಬ್ಬರಗಳ ಲಭ್ಯತೆ, ಕೃಷಿ ವಿಮಾ ಯೋಜನೆ ಅನುಷ್ಠಾನ ಹಾಗೂ ಕೃಷಿ ಅಭಿಯಾನ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಯಾದ ನಂತರ ಬಿತ್ತನೆ ಬೀಜಗಳು ಮತ್ತು ಗೊಬ್ಬರಕ್ಕಾಗಿ ರೈತರಿಂದ ದಿಢೀರ್ ಬೇಡಿಕೆ ಬರುತ್ತದೆ. ಅಂತಹ ಸಂದರ್ಭದಲ್ಲಿ ಯಾವುದೇ ಅನಾನುಕೂಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಮಾಡಿಕೊಳ್ಳಬೇಕು ಎಂದು ವಿಶಾಲ್ ಹೇಳಿದರು.

ರೈತರಿಗೆ ಮಾಹಿತಿ ಒದಗಿಸಲು ಅಥವಾ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಬಿತ್ತನೆ ಬೀಜಗಳನ್ನು ವಿತರಿಸುವಾಗ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡೇ ರೈತರಿಗೆ ಪೂರೈಸಬೇಕು ಮತ್ತು ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ನೀರಿನ ಕೊರತೆಯಿಂದಾಗಿ ರೈತರು ಕಬ್ಬಿನ ಬದಲಾಗಿ ಪರ್ಯಾಯ ಬೆಳೆಯನ್ನು ಬೆಳೆಯಲು ಮುಂದಾದರೆ ಅಗತ್ಯವಾಗಿರುವ ಪರ್ಯಾಯ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಭೂಮಿಯ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರೈತರಿಗೆ ಅಗತ್ಯವಿರುವ ಬೀಜ-ಗೊಬ್ಬರಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಸಹಕಾರ ನೀಡಬೇಕು ಎಂದು ಬೀಜ-ಗೊಬ್ಬರ ಮಾರಾಟಗಾರರಿಗೂ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕೃಷಿ ಅಭಿಯಾನ: ಕೃಷಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕೃಷಿ ಇಲಾಖೆಯ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷಣೆಯೊಂದಿಗೆ ಮೇ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಕೃಷಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಈ ಅಭಿಯಾನದ ಆಶಯದ ಪ್ರಕಾರ ಪ್ರತಿಯೊಬ್ಬ ರೈತರಿಗೂ ಮಾಹಿತಿ ಒದಗಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಮಳೆ ಕೊರತೆ: ಜಿಲ್ಲೆಯಲ್ಲಿ ಈ ಬಾರಿ ಶೇ.67ರಷ್ಟು ಮಳೆಯ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನ ಜನವರಿ ತಿಂಗಳಿನಿಂದ ಇಲ್ಲಿಯವರೆಗೆ 48 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಇದುವರೆಗೆ ಕೇವಲ 16 ಮಿ.ಮೀ. ಮಳೆಯಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಮಾಹಿತಿ ನೀಡಿದರು.

ಮುಂಗಾರು ಹಂಗಾಮಿಗಾಗಿ ಜಿಲ್ಲೆಗೆ ಅಗತ್ಯರುವ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಇರುತ್ತದೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ-ಗೊಬ್ಬರಗಳ ವಿತರಣೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಡಿ.ಕೋಳೇಕರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಹಕಾಟಿ, ಕೃಷಿ, ಸಹಕಾರ ಸೇರಿದಂತೆ ವಿವಿಧ ಇಲಾಖೆಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News