ವಾರದೊಳಗೆ ಬರ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸಂಪುಟ ಸೂಚನೆ

Update: 2019-05-09 12:42 GMT

ಬೆಂಗಳೂರು, ಮೇ 9: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ ಸೇರಿ ಪರಿಹಾರ ಕಾಮಗಾರಿ ಕೈಗೊಳ್ಳಲು ಹಣಕಾಸಿನ ಕೊರತೆ ಇಲ್ಲ. ಉಪ ಚುನಾವಣೆ ನಡೆಯಲಿರುವ 2 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವಾರದೊಳಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸಂಪುಟ ಸಭೆಯಲ್ಲಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಲಾಗಿದೆ.

ಗುರುವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ, ಟ್ಯಾಂಕರ್ ಮೂಲಕ ಹಾಗೂ ಖಾಸಗಿ ಬೋರ್‌ವೆಲ್ ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

ಮೇ 15ಕ್ಕೆ ಸಿಎಂ ಸಭೆ: ಬರ ಪೀಡಿತ ಪ್ರದೇಶಗಳಲ್ಲಿ ಸರಕಾರ ಕೈಗೊಂಡಿರುವ ಪರಿಹಾರ ಕ್ರಮಗಳಿಗೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಮೇ 15ರಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಅವರು ವಿವರ ನೀಡಿದರು.

ಸಂಪುಟ ಸಭೆಯಲ್ಲಿ ಬರ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಕುಡಿಯುವ ನೀರಿನ ತೊಂದರೆ ಕಂಡುಬಂದ ಎರಡು ದಿನದೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದ ಅವರು, ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಅನುಮತಿ ನೀಡಲು ತಹಶಿಲ್ದಾರರಿಗೆ ಅಧಿಕಾರ ನೀಡಲಾಗಿದೆ ಎಂದರು.

ಹಣ ಬಿಡುಗಡೆ: ಕಂದಾಯ ಇಲಾಖೆಯಿಂದ ಕುಡಿಯುವ ನೀರಿಗಾಗಿ 324 ಕೋಟಿ ರೂ., ಗ್ರಾಮೀಣಾಭಿವೃದ್ಧಿ 201ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ರಾಜ್ಯದ 2,575 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 1,324 ಗ್ರಾಮಗಳಿಗೆ 2,177 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತದೆ. 1,647 ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆಗೆ ಪಡೆದು 1,251 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಆಯೋಗ ನೀತಿ ಸಂಹಿತೆ ಸಡಿಸಲಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ತುರ್ತು ಕುಡಿಯುವ ನೀರಿಗಾಗಿ 727ಕೋಟಿ ರೂ.ಹಣವಿದೆ ಎಂದು ವಿವರ ನೀಡಿದರು.

ಬರ ಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ 150 ಮೇವು ಬ್ಯಾಂಕ್ ತೆರೆಯಲಾಗಿದ್ದು, ಪ್ರತಿ ಕೆಜಿಗೆ 2 ರೂ.ನಂತೆ ಮೇವು ರೈತರಿಗೆ ವಿತರಿಸಲಾಗುತ್ತಿದೆ. 12 ಗೋಶಾಲೆಗಳನ್ನು ತೆರೆಯಲಾಗಿದ್ದು, 11,614 ಜಾನುವಾರುಗಳಿಗೆ ಸಹಾಯವಾಗುತ್ತಿದೆ. ಅಲ್ಲದೆ, 16,080 ಮೇವಿನ ಕಿಟ್‌ಗಳನ್ನು ನೀಡಲಾಗಿದ್ದು, ಮೇವು ಉತ್ಪಾದನೆಗೆ ಸಹಕಾರಿಯಾಗಿದೆ ಎಂದರು.

ದಾಖಲೆಯ ಉದ್ಯೋಗ ಸೃಷ್ಟಿ: ಬರ ಹಿನ್ನೆಲೆಯಲ್ಲಿ ಮಾರ್ಚ್ ಅಂತ್ಯದವರೆಗೂ 8.5 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ ಮೀರಿ 10.47 ಕೋಟಿ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದ್ದು, ಇದು ದಾಖಲೆಯಾಗಿದೆ. ಮೇ ತಿಂಗಳಿನಲ್ಲೇ 74 ಲಕ್ಷ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದ್ದು, ಇದರಿಂದ ಗುಳೆ ತಪ್ಪಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News