ರೆಸಾರ್ಟ್‌ನಲ್ಲಿ ಸಿಎಂ ಮೋಜು ಮಸ್ತಿ ಮಾಡುತ್ತಿದ್ದಾರೆ: ಶ್ರೀರಾಮುಲು

Update: 2019-05-11 12:58 GMT

ಹುಬ್ಬಳ್ಳಿ, ಮೇ 11: ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬರಗಾಲದಿಂದ, ಜನರು ಪರದಾಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತ್ರ ರೆಸಾರ್ಟ್‌ನಲ್ಲಿ ಮೋಜು, ಮಸ್ತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಚುನಾವಣಾ ಪ್ರಚಾರ ಕೈಗೊಂಡಿರುವ ಎಲ್ಲ ಕಡೆಯು ಜನಸಾಮಾನ್ಯರು ಮುಖ್ಯಮಂತ್ರಿಯ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಸರಕಾರಕ್ಕೆ ಪಾಠ ಕಲಿಸಲು ಜನ ಕಾಯುತ್ತಿದ್ದಾರೆ ಎಂದರು.

ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಕಾರಣದಿಂದ, ಈ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರದ ಪತನದ ಕುರಿತು ಯಾರು ಯಾರಿಗೂ ಗಡುವು ನೀಡುತ್ತಿಲ್ಲ. 104 ಸ್ಥಾನಗಳನ್ನು ಗೆದ್ದಿರುವ ನಾವು ವಿರೋಧ ಪಕ್ಷದಲ್ಲಿದ್ದು, ನಮ್ಮ ಕೆಲಸವನ್ನು ಮಾಡುತ್ತಿದ್ದೇವೆ. ಕೇವಲ 37 ಸ್ಥಾನಗಳನ್ನು ಗೆದ್ದಿರುವ ಪಕ್ಷದ ಮುಖ್ಯಸ್ಥರು ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯಕ್ಕೆ ಒಬ್ಬ ಸಮರ್ಥ ನಾಯಕ ಬೇಕಾಗಿದ್ದು, ಅದು ಯಡಿಯೂರಪ್ಪ ಒಬ್ಬರೇ ಎಂದು ಶ್ರೀರಾಮುಲು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News