ಕುಮಾರಸ್ವಾಮಿ ರಾಜೀನಾಮೆ ನೀಡಿ ಖರ್ಗೆಯನ್ನು ಮುಖ್ಯಮಂತ್ರಿ ಮಾಡಲಿ: ಯಡಿಯೂರಪ್ಪ

Update: 2019-05-15 15:37 GMT

ಬೆಂಗಳೂರು, ಮೇ 15: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕೆಂದು ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಸ್‌ವೈ, ಮಲ್ಲಿಕಾರ್ಜುನ ಖರ್ಗೆಯನ್ನು ಮುಖ್ಯಮಂತ್ರಿ ಮಾಡುವ ಮೂಲಕ ಎಚ್.ಡಿ.ಕುಮಾರಸ್ವಾಮಿ ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲಿ ಎಂದಿದ್ದಾರೆ.

ಚಿಂಚೋಳಿ ಕ್ಷೇತ್ರವನ್ನು ದತ್ತು ಪಡೆಯುತ್ತೇನೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ, ಇದುವರೆಗೂ ಚಿಂಚೋಳಿ ತಿರುಗಿ ನೋಡದ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣೆಗಾಗಿ ಹುಸಿ ಭರವಸೆ ನೀಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು ಎಂಬುದು ಬಾಲಿಶ ಹೇಳಿಕೆ. ಇದೊಂದು ಚುನಾವಣಾ ಹೇಳಿಕೆಯಷ್ಟೆ. ಖರ್ಗೆ ಅವರ ಹಿರಿತನ ಹಾಗೂ ಸೇವೆಯನ್ನು ಕಾಂಗ್ರೆಸ್ ಸದುಪಯೋಗ ಪಡಿಸಿಕೊಂಡಿಲ್ಲ. ಈಗಲಾದರು ಎಚ್.ಡಿ.ಕುಮಾರಸ್ವಾಮಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಖರ್ಗೆಯನ್ನು ಮುಖ್ಯಮಂತ್ರಿ ಮಾಡಲಿ ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News