ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆ

Update: 2019-05-16 12:49 GMT

ಹುಬ್ಬಳ್ಳಿ, ಮೇ 16: ಸಮ್ಮಿಶ್ರ ಸರಕಾರದ ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಾಗದಿದ್ದರೆ ಬಳೆ ತೊಟ್ಟುಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷದ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು. ಅದನ್ನು ಮಾಡಲಾಗದಿದ್ದರೆ ಅವರೆಂತಹ ನಾಯಕ. ತಮ್ಮ ಶಾಸಕರನ್ನು ಸಮಾಧಾನ, ವಿಶ್ವಾಸದಿಂದ ನೋಡಿಕೊಳ್ಳಲಾಗದ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಸಮ್ಮಿಶ್ರ ಸರಕಾರದ ವಿರುದ್ಧ ಕೆಲ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟುವ ಕೆಲಸ ಮಾಡುವ ಮೂಲಕ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಇವರು ಮಾಡುತ್ತಿರುವ ಈ ಷಡ್ಯಂತ್ರಗಳನ್ನು ಯಡಿಯೂರಪ್ಪ ಮೇಲೆ ಹಾಕುವುದು ಎಷ್ಟು ಸರಿ. ಇದರ ಜೊತೆಗೆ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲವೆಂದು ಹೇಳುವುದರ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಡ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ದೇವರಾಜ ಅರಸು ಹಿಂದುಳಿದವರ ಪರವಾಗಿ ದುಡಿಯುವ ಮೂಲಕ ಸಮಾಜದಲ್ಲಿ ಒಗ್ಗಟ್ಟು ತಂದರು. ಆದರೆ, ಸಿದ್ದರಾಮಯ್ಯ ಜಾತಿ, ಧರ್ಮವನ್ನು ಒಡೆಯುವ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News