ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರವಾಸ ಮುಂದೂಡಿ: ಯಾತ್ರಾರ್ಥಿಗಳಿಗೆ ಡಾ.ಹೆಗ್ಗಡೆ ಮನವಿ
Update: 2019-05-17 15:40 GMT
ಬೆಳ್ತಂಗಡಿ, ಮೇ 17: ದ.ಕ. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಅದೇ ರೀತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ನೀರಿನ ಅಭಾವ ತೀವ್ರವಾಗಿ ಉಂಟಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸುವ ಯಾತ್ರಾರ್ಥಿಗಳು ತಮ್ಮ ಪ್ರವಾಸವನ್ನು ಸ್ವಲ್ಪ ಕಾಲ ಮುಂದೂಡುವಂತೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.
ಶ್ರೀ ಕ್ಷೇತ್ರದಲ್ಲಿ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಧರ್ಮಸ್ಥಳದ ಪಕ್ಕದಲ್ಲೇ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದೆ. ಯಾತ್ರಾರ್ಥಿಗಳ ಬಳಕೆಗೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾದಿಗಳು, ಪ್ರವಾಸಿಗರು ತಮ್ಮ ಪ್ರವಾಸವನ್ನು ಸ್ವಲ್ಪ ಕಾಲ ಮುಂದೂಡಿ ಸಹಕರಿಸುವಂತೆ ಡಾ. ಹೆಗ್ಗಡೆ ಅವರು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.