ಖರ್ಗೆಯದು ಮುಖ್ಯಮಂತ್ರಿ ಸ್ಥಾನಕ್ಕೂ ಮೀರಿದ ವ್ಯಕ್ತಿತ್ವ: ಎಚ್.ವಿಶ್ವನಾಥ್

Update: 2019-05-17 15:45 GMT

ಬೆಂಗಳೂರು, ಮೇ 17: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಯಾರೊಂದಿಗೂ ಹೋಲಿಸಲು ಸಾಧ್ಯವಿಲ್ಲ. ಅವರದ್ದು ಮುಖ್ಯಮಂತ್ರಿ ಸ್ಥಾನಕ್ಕೂ ಮೀರಿದ ವ್ಯಕ್ತಿತ್ವ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ಶುಕ್ರವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಲ್ಲಿಕಾರ್ಜುನ ಖರ್ಗೆ ಜೊತೆ ಯಾರನ್ನೂ ಹೋಲಿಸಬೇಡಿ. ಅವರ ಕೊಡುಗೆ ಈ ರಾಜ್ಯಕ್ಕೆ ಅಪಾರ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳು ಅವಿಸ್ಮರಣೀಯ. ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಇಬ್ಬರೂ ಉನ್ನತಮಟ್ಟದ ನಾಯಕರು ಎಂದು ವಿಶ್ವನಾಥ್ ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ಎಚ್.ಡಿ.ರೇವಣ್ಣ ಕೂಡ ಅರ್ಹರಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನ್ನನ್ನು ಯಾಕೆ ಕೇಳುತ್ತೀರಾ? ಖರ್ಗೆ ಮುಖ್ಯಮಂತ್ರಿ ಹುದ್ದೆಯಿಂದ ಯಾಕೆ ವಂಚಿತರಾದರು ಎಂಬುದರ ಕುರಿತು ಸಿದ್ದರಾಮಯ್ಯರನ್ನು ಕೇಳಿ ಎಂದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಮೇ 21ರಂದು ಸಚಿವರು, ಶಾಸಕರು, ಸಂಸದರು ಸೇರಿದಂತೆ ಎಲ್ಲ ಪ್ರಮುಖ ಜೆಡಿಎಸ್ ಮುಖಂಡರ ಸಭೆ ನಡೆಯಲಿದೆ. ಮೇ 24ರಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅದರಲ್ಲಿ ಮೇ 23ರಂದು ಪ್ರಕಟವಾಗುವ ಲೋಕಸಭಾ ಚುನಾವಣೆಯ ಫಲಿತಾಂಶದ ಪರಿಣಾಮಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ವಿಶ್ವನಾಥ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News