ನಳಿನ್ ಕುಮಾರ್ ಕಟೀಲು ಗಡಿಪಾರಿಗೆ ದ.ಕ. ಕಾಂಗ್ರೆಸ್ ಆಗ್ರಹ

Update: 2019-05-18 06:28 GMT

ಮಂಗಳೂರು, ಮೇ 18: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ತಕ್ಷಣ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಹಾತ್ಮಾ ಗಾಂಧೀಜಿಯನ್ನು ಅವಮಾನಿಸಿದ್ದನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಶನಿವಾರ ಪಕ್ಷದ ಕಚೇರಿ ಮುಂದೆ ನಡೆಸಿದ ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಇವರ ಹೇಳಿಕೆ ಅಕ್ಷಮ್ಯ ಅಪರಾಧದಿಂದ ಕೂಡಿದೆ. ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕದೇ ಹೋದರೆ, ಸ್ವಾತಂತ್ರ ಹೋರಾಟಗಾರರನ್ನೆಲ್ಲಾ ಇವರು ದೇಶದ್ರೋಹಿಗಳಾಗಿ ಬಿಂಬಿಸುವ ಸಾಧ್ಯತೆ ಇದೆ ಎಂದ ರೈ, ನಳಿನ್‌ರನ್ನು ದ.ಕ.ಜಿಲ್ಲೆಯ ಸಂಸದ ಎನ್ನಲು ನಾಚಿಕೆಯಾಗುತ್ತದೆ. ಅವರನ್ನು ಗಡಿಪಾರು ಮಾಡುವ ಮೂಲಕ ಸೂಕ್ತ ಪಾಠ ಕಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಅಬ್ದುಲ್ ಅಝೀಝ್, ಮುಡಾ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಪಕ್ಷದ ಮುಖಂಡರಾದ ಬಿ.ಎ.ಮುಹಮ್ಮದ್ ಹನೀಫ್, ಖಾಲಿದ್ ಉಜಿರೆ, ಟಿ.ಕೆ.ಸುಧೀರ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News