ರಾಜ್ಯದ 70,116 ಮಕ್ಕಳು ಶಾಲೆಯಿಂದ ಹೊರಗೆ: ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್

Update: 2019-05-18 12:47 GMT

ಬೆಂಗಳೂರು, ಮೇ 18: ಪ್ರಾಥಮಿಕ ಶಿಕ್ಷಣ ಇಲಾಖೆಯಿಂದ 6 ರಿಂದ 14 ವರ್ಷದ ಸುಮಾರು 70,116 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಕಳವಳ ವ್ಯಕ್ತಪಡಿಸಿದರು.

ಶನಿವಾರ ನಗರದ ಬಾಲ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಶಾಲೆ ಕಡೆ ನನ್ನ ನಡೆ’ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ರಾಜ್ಯ ಮಟ್ಟದ ಜನಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಜವಾಬ್ದಾರಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಎಲ್ಲಾ ಮಕ್ಕಳಿಗೂ ಉಚಿತ ಕಡ್ಡಾಯ ಮತ್ತು ಸಮಾನ ಗುಣಮಟ್ಟದ ಶಿಕ್ಷಣ ಪಡೆಯುವ ಹಕ್ಕನ್ನು ಒಂದು ಮೂಲಭೂತ ಹಕ್ಕನ್ನಾಗಿ ಸುಪ್ರೀಂ ಕೋರ್ಟ್ 1993 ರಲ್ಲಿ ಐತಿಹಾಸಿಕ ತೀರ್ಪು ನೀಡಿದೆ ಎಂದು ಹೇಳಿದರು.

ಈ ದಿಸೆಯಲ್ಲಿ ಕೇಂದ್ರ ಸರಕಾರ ರೂಪಿಸಿರುವ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ-2009 ಅತ್ಯಂತ ಮಹತ್ವದ ಕಾಯ್ದೆಯಾಗಿದೆ. ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ 6 ರಿಂದ 14 ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತಂದು ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಈ ಅಭಿಯಾನ ಯಶಸ್ವಿಯಾಗಬೇಕಾದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಶಾಲೆಯಿಂದ ಸಾವಿರಾರು ಮಕ್ಕಳು ಹೊರಗೆ ಉಳಿದಿದ್ದು, ಈ ಎಲ್ಲ ಮಕ್ಕಳನ್ನು ಶಾಲೆಯ ಮುಖ್ಯವಾಹಿನಿಗೆ ತರಲು ಯೋಜನೆ ರೂಪಿಸಲಾಗಿದ್ದು, ಶಿಕ್ಷಣ ಇಲಾಖೆ ಹಾಗೂ ಇಲಾಖೆಯೇತರ ಸಮನ್ವಯತೆ ಅಗತ್ಯವಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಸಂಕಲ್ಪ ಮಾಡಬೇಕೆಂದು ಕರೆ ನೀಡಿದರು.

ರಾಜ್ಯ ಸರಕಾರ ಪ್ರಾಥಮಿಕ ಶಿಕ್ಷಣಕ್ಕೆ ನೀಡುತ್ತಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲೆಗೆ ಕರೆತರುವ ಜವಾಬ್ದಾರಿ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕರ ಮೇಲಿದೆ.

-ಟಿ.ಎಂ.ವಿಜಯಭಾಸ್ಕರ್, ರಾಜ್ಯ ಮುಖ್ಯ ಕಾರ್ಯದರ್ಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News