ಗೋಡ್ಸೆ ಪರ ಹೇಳಿಕೆ: ಬಿಜೆಪಿ ಮುಖಂಡರ ವಿರುದ್ಧ ಕಾಂಗ್ರೆಸ್ ಧರಣಿ

Update: 2019-05-18 14:38 GMT

ಉಡುಪಿ, ಮೇ 18: ಮಹಾತ್ಮ ಗಾಂಧಿಯವರನ್ನು ಹತ್ಯೆಗೈದ ಗೋಡ್ಸೆಯನ್ನು ದೇಶಭಕ್ತರೆಂದು ಬಿಂಬಿಸುವ ಬಿಜೆಪಿ ಮುಖಂಡರಾದ ನಳಿನ್ ಕುಮಾರ್ ಕಟೀಲ್, ಅನಂತ ಕುಮಾರ್ ಹೆಗಡೆ, ಸಾದ್ವಿ ಪ್ರಜ್ಞಾ ಸಿಂಗ್ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಎದುರು ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್ ಮಾತನಾಡಿ, ಬಿಜೆಪಿ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾತೂ ರಾಮ್ ಗೋಡ್ಸೆಯನ್ನು ವೈಭವೀಕರಿಸುತ್ತಿದೆ. ಆತನಿಗೆ ದೇಶಭಕ್ತನ ಪಟ್ಟ ಕಟ್ಟುವ ಕೆಲಸ ಮಾಡುತ್ತಿದೆ. ಆ ಮೂಲಕ ದೇಶದ ಜನರಲ್ಲಿ ಹಿಂಸೆಯ ಭಾವನೆ ಬೆಳೆಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಮಹಾತ್ಮ ಗಾಂಧಿ, ಅಹಿಂಸಾ ತತ್ವದಡಿಯಲ್ಲಿ ದೇಶವನ್ನು ಕಟ್ಟಬಹುದು ಎಂಬುವುದನ್ನು ತೋರಿಸಿಕೊಟ್ಟರು. ಅದರಿಂದಲೇ ಈಗಲೂ ಇಡೀ ಜಗತ್ತು ಅವರನ್ನು ಗೌರವದಿಂದ ಕಾಣುತ್ತಿದೆ. ಆದರೆ ಬಿಜೆಪಿಯ ಕೆಲ ನೀತಿಕೆಟ್ಟ ಸಂಸದರು ಹಾಗೂ ನಾಯಕರು ಗೋಡ್ಸೆ ಯನ್ನು ದೇಶಭಕ್ತನೆಂದು ಬಿಂಬಿಸುವ ಮೂಲಕ ಮಹಾತ್ಮ ಗಾಂಧೀಜಿಗೆ ಅವಮಾನ ಮಾಡುತ್ತಿದ್ದಾರೆ ಎಂದರು.

ಯುವಜನಾಂಗಕ್ಕೆ ಆದರ್ಶ ಮೌಲ್ಯಗಳನ್ನು ತಿಳಿಸಿಕೊಟ್ಟು, ಮಾರ್ಗದರ್ಶನ ಮಾಡಬೇಕಾದ ಬಿಜೆಪಿ ಸಂಸದರು ಹಾಗೂ ನಾಯಕರು ಅವರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧೀಜಿಗೆ ಬಿಜೆಪಿ ಅವಮಾನ ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ಜನಾಂದೋಲನ ಮಾಡುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಧರಣಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ವರೋನಿಕಾ ಕರ್ನೆಲಿಯೋ, ಮುರಳಿ ಶೆಟ್ಟಿ, ಮುಖಂಡರಾದ ಭಾಸ್ಕರ್ ರಾವ್ ಕಿದಿಯೂರು, ಇಸ್ಮಾಯಿಲ್ ಆತ್ರಾಡಿ, ಶಶಿಧರ್ ಶೆಟ್ಟಿ ಎರ್ಮಾಳ್, ಸರಳ ಕಾಂಚನ್, ಸುನೀತಾ ಶೆಟ್ಟಿ, ರೋಶನಿ ಒಲಿವೇರಾ, ಪ್ರಖ್ಯಾತ್ ಶೆಟ್ಟಿ, ಹಬೀಬ್ ಅಲಿ, ರಮೇಶ್ ಕಾಂಚನ್, ಇಕ್ಬಾಲ್ ಮನ್ನಾ, ಲೂವಿಸ್ ಲೋಬೊ, ಜನಾರ್ದನ ಭಂಡಾರ್ಕರ್, ಯತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News