ಕಂಡ್ಲೂರು: ಪೊಲೀಸ್ ದೌರ್ಜನ್ಯ ನಿಲ್ಲಿಸುವಂತೆ ಒತ್ತಾಯ

Update: 2019-05-19 15:33 GMT

ಉಡುಪಿ, ಮೇ 19: ಕುಂದಾಪುರ ಪೊಲೀಸ್ ಠಾಣೆಗೆ ಕಲ್ಲೆಸೆತ ಪ್ರಕರಣದ ಆರೋಪಿಗಳ ಮನೆಯವರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು ಎಂದು ಕರವೇ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್ ಒತ್ತಾಯಿಸಿದ್ದಾರೆ.

 ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೆಲವು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಈ ಕಾನೂನು ಬಾಹಿರ ಕೃತ್ಯವನ್ನು ಯಾರು ಕೂಡ ಸಮರ್ಥಿಸಿಕೊಳ್ಳುವಂತಿಲ್ಲ. ಕಾನೂನು ರಕ್ಷಕರ ಮೇಲೆ ಹಲ್ಲೆ ನಡೆಸುವುದು ಹಾಗೂ ಠಾಣೆಗೆ ಕಲ್ಲೆಸೆಯುವಂತಹ ಪ್ರಕರಣಗಳು ಸಮರ್ಥನೀಯವಲ್ಲ. ಅಂತವರಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಅವರು ತಿಳಿಸಿದ್ದಾರೆ.

 ಆದರೆ ಪೊಲೀಸ್ ಇಲಾಖೆ ಆರೋಪಿಗಳನ್ನು ಹುಡುಕುವ ಭರದಲ್ಲಿ ಮಧ್ಯ ರಾತ್ರಿಯಲ್ಲಿ ಕೇವಲ ಮಹಿಳೆಯರು ಇರುವ ಮನೆಯೊಳಗೆ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಕಿರಿಕಿರಿ ನೀಡುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಪೊಲೀಸರು ಈ ರೀತಿಯ ವರ್ತನೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News