ನೀಟ್ ಮರುಪರೀಕ್ಷೆಗೆ ಹಾಜರಾದ ಅವಕಾಶ ವಂಚಿತ ವಿದ್ಯಾರ್ಥಿಗಳು

Update: 2019-05-20 16:04 GMT

ಬೆಂಗಳೂರು, ಮೇ 20: ರೈಲು ವಿಳಂಬದಿಂದ ವೈದ್ಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಿಂದ(ನೀಟ್ ಪರೀಕ್ಷೆ) ವಂಚಿತರಾದ ಅಭ್ಯರ್ಥಿಗಳಿಗೆ ನೀಟ್ ಮರುಪರೀಕ್ಷೆ ನಡೆಯಿತು.

ಸೋಮವಾರ ನಗರದ ಬಿಬಿಯುಎಲ್ ಜೈನ್ ಕಾಲೇಜಿನಲ್ಲಿ ನೀಟ್ ಮರು ಪರೀಕ್ಷೆ ನಡೆಸಲಾಯಿತು. ಪರೀಕ್ಷೆಗೆ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಶುರುವಾಗಿ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಿತು.

ಹಿನ್ನೆಲೆ: ಹಂಪಿ ಎಕ್ಸ್‌ಪ್ರೆಸ್ ರೈಲು 7 ಗಂಟೆ ತಡವಾಗಿ ಬೆಂಗಳೂರಿಗೆ ಬಂದ ಕಾರಣ ಸುಮಾರು 500 ವಿದ್ಯಾರ್ಥಿಗಳು ಮೇ 5 ರಂದು ಬರೆಯಬೇಕಿದ್ದ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದರು. ಬೆಳಗ್ಗೆ 7.30ಕ್ಕೆ ತಲುಪಬೇಕಿದ್ದ ರೈಲು ಮಧ್ಯಾಹ್ನ 2.30ಕ್ಕೆ ಆಗಮಿಸಿತ್ತು. ರೈಲು ಬೆಂಗಳೂರಿಗೆ ಆಗಮಿಸುವ ವೇಳೆಗೆ ಪರೀಕ್ಷೆ ಪ್ರಾರಂಭವಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲಾಗದೆ, ಪರೀಕ್ಷೆಯಿಂದ ವಂಚಿತರಾಗಿದ್ದರು.

ಇನ್ನು, ನೀಟ್ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದರು. ಜೊತೆಗೆ ಪ್ರಧಾನಮಂತ್ರಿ, ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿ ರೈಲ್ವೆ ಇಲಾಖೆಯ ಕ್ರಮವನ್ನು ಖಂಡಿಸಿದ್ದರು. ಸಿಎಂ ಕುಮಾರಸ್ವಾಮಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರಿಗೆ ಪತ್ರ ಬರೆದು ಅವಕಾಶ ವಂಚಿತ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದರು. ಹೀಗಾಗಿ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಹಂಪಿ ಎಕ್ಸ್‌ಪ್ರೆಸ್ ರೈಲು ವಿಳಂಬದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮೇ 20ರಂದು ನೀಟ್ ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News