ಮೇ 29ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2019-05-25 14:48 GMT

ಬೆಂಗಳೂರು, ಮೇ 25: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಘಟಾನುಘಟಿ ಮುಖಂಡರು ಸೇರಿದಂತೆ ಅಭ್ಯರ್ಥಿಗಳ ಹೀನಾಯ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಲ್‌ಪಿ ಸಭೆ ಕರೆದಿದ್ದಾರೆ.

ಮೇ 29ರ ಸೋಮವಾರ ಸಂಜೆ 6 ಗಂಟೆಗೆ ನಗರದ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಯಲಿದ್ದು, ಪಕ್ಷದ ಎಲ್ಲ ಶಾಸಕರು ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಚುನಾವಣಾ ಸೋಲಿನ ಫಲಿತಾಂಶ, ಪಕ್ಷ ಸಂಘಟನೆ ಸಂಬಂಧ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಯಾವುದೇ ಕ್ಷಣದಲ್ಲಾದರೂ ಆಪರೇಷನ್ ಕಮಲ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಅತೃಪ್ತರು ಸೇರಿದಂತೆ ಶಾಸಕರ ವಿಶ್ವಾಸ ಗಳಿಸಲು ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆಂದು ಗೊತ್ತಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದಂತೆ ಮುನ್ನಡೆಸುವ ಬಗ್ಗೆ ಶಾಸಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ಕ್ಷೇತ್ರಗಳ ಅಭಿವೃದ್ಧಿ, ಬರ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News