ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲು ನಿರ್ದೇಶಿಸುವಂತೆ ಕುಮಾರಸ್ವಾಮಿಗೆ ಮನವಿ
ಬೆಂಗಳೂರು, ಮೇ 28: ಪೊಲೀಸ್ ಇಲಾಖೆ ಒತ್ತಡ ಮುಕ್ತವಾಗಿ, ಜನಮುಖಿಯಾಗಿ, ನಿಷ್ಪಕ್ಷಪಾತ ಧೋರಣೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದೆ.
ಮಾಧ್ಯಮದವರ ಮೇಲೆ ಇತ್ತೀಚಿಗೆ ಪೊಲೀಸ್ ಪ್ರಕರಣಗಳು ವಿನಾಕಾರಣ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ದೇಶಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸಿದ ರಾಜ್ಯ ಪೊಲೀಸ್ ಇಲಾಖೆ, ಇಂದು ತನ್ನ ಘನತೆಯನ್ನು ಕಳೆದುಕೊಳ್ಳುತ್ತಿದೆ. ಇತ್ತೀಚಿನ ರಾಜಕೀಯ ಹಾಗೂ ಬಾಹ್ಯ ಒತ್ತಡಗಳು ಹೆಚ್ಚುತ್ತಿರುವ ಕಾರಣ ಕೆಲವು ಪ್ರಕರಣಗಳಲ್ಲಿ ನಿಷ್ಪಕ್ಷಪಾತ ನ್ಯಾಯ ಇಲ್ಲದಂತಾಗಿದೆ.
ಮಾಧ್ಯಮಗಳಲ್ಲಿ ಅತ್ಯಂತ ಒತ್ತಡದ ಮಧ್ಯೆ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಆಗುತ್ತಿರುವ ಲೋಪದೋಷಗಳ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಕಾಲಘಟ್ಟದಲ್ಲಿದ್ದೇವೆ. ಕೆಲವು ಪ್ರಕರಣಗಳಲ್ಲಿ ಪೊಲೀಸರು ಪತ್ರಕರ್ತರನ್ನೇ ನೇರವಾಗಿ ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಲು ಮುಖ್ಯಮಂತ್ರಿ ನಿರ್ದೇಶನ ನೀಡಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.