ಸಂಕಷ್ಟದಲ್ಲಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು: ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್
ಧಾರವಾಡ, ಜೂ.1: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಪೂರೈಕೆ ನೀತಿಯ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೆ ಪ್ರತಿದಿನ ಕನಿಷ್ಟ 55 ಲೀಟರ್ ನೀರು ಅಗತ್ಯವಿದೆ. ಈ ಪ್ರಮಾಣದ ನೀರಿನ ಸೌಲಭ್ಯವಿರದ ಗ್ರಾಮಗಳಿಗೆ ತಕ್ಷಣದಿಂದಲೇ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚನೆ ನೀಡಿದ್ದಾರೆ.
ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್ಚು ಜಲ ಮೂಲ ಇರುವ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ಸಾರ್ವಜನಿಕರಿಗೆ ನೀರು ಒದಗಿಸಬೇಕು. ಮೇವು ಮತ್ತು ಕೊಳವೆಬಾವಿಗಳ ಬಾಕಿ ಮೊತ್ತವನ್ನು ವಿಳಂಬ ಮಾಡದೇ ಪಾವತಿ ಮಾಡಬೇಕು ಎಂದು ತಿಳಿಸಿದರು.
ಜೂ.12 ಹಾಗೂ 13ರಂದು ಮುಖ್ಯಮಂತ್ರಿ, ಬೆಂಗಳೂರಿನಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ವಿಶೇಷ ಸಮ್ಮೇಳನ ಏರ್ಪಡಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಮಾರ್ಗಸೂಚಿಯಂತೆ ಪ್ರತಿ ವ್ಯಕ್ತಿಗೆ ಪ್ರತಿ ದಿನ ಕನಿಷ್ಠ 55 ಲೀಟರ್ ನೀರು ಅಗತ್ಯವಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 35 ಎಲ್ಪಿಸಿಡಿ ಪ್ರಮಾಣದಲ್ಲಿ ನೀರು ಪೂರೈಕೆ ಆಗುತ್ತಿರುವ ಗ್ರಾಮಗಳನ್ನು ಪಟ್ಟಿ ಮಾಡಿ ಅವುಗಳಿಗೆ ಟ್ಯಾಂಕರ್ ಅಥವಾ ಪರ್ಯಾಯ ಮೂಲಗಳ ಮೂಲಕ ನೀರು ಪೂರೈಸಬೇಕು. ಟಾಸ್ಕ್ಫೋರ್ಸ್ ಅಡಿ ಕೊಳವೆಬಾವಿಗಳನ್ನು ಆಳಗೊಳಿಸುವ ಮತ್ತು ಪುನಶ್ಚೇತನಗೊಳಿಸುವ ಕಾಮಗಾರಿಗಳು ಬಹುತೇಕ ಯಶಸ್ವಿಯಾಗಿ ನಡೆಯುತ್ತಿವೆ. ಈ ಕೊಳವೆಬಾವಿಗಳ ಪ್ರಯೋಜನ ಗ್ರಾಮೀಣ ಜನರಿಗೆ ಸಿಗಬೇಕು ಎಂದು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಒಟ್ಟು 388 ಜನವಸತಿಗಳು ಇವೆ. ಅವುಗಳಲ್ಲಿ 72 ಗ್ರಾಮಗಳಿಗೆ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಪಡೆದಿರುವ ನೀರನ್ನು ಪೂರೈಸಲಾಗುತ್ತಿದೆ. 9 ಹಳ್ಳಿಗಳು ತೀವ್ರ ಸಂಕಷ್ಟದಲ್ಲಿವೆ. 27 ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಮೇ 25ರವರೆಗೆ ಎಲ್ಲ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಶೇಖರ್ ಮುನವಳ್ಳಿ ಸಭೆಗೆ ಮಾಹಿತಿ ನೀಡಿದರು.
ಮುಂಗಾರು ಹಂಗಾಮಿಗೆ ಬೀಜ, ರಸಗೊಬ್ಬರ ದಾಸ್ತಾನು, ಇನ್ಪುಟ್ ಸಬ್ಸಿಡಿಯ ಪಾವತಿ, ಸಾಮಾಜಿಕ ಭದ್ರತಾ ಯೋಜನೆಗಳಲ್ಲಿನ ಫಲಾನುಭವಿಗಳಿಗೆ ಆಧಾರ್ ಸಂಪರ್ಕ ಕಲ್ಪಿಸಬೇಕು. 94 ಸಿ ಮತ್ತು 94 ಸಿಸಿ ಅಡಿ ಬಾಕಿ ಇರುವ ಅಕ್ರಮ ಸಕ್ರಮ ಯೋಜನೆಯ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಗ್ರಾಮಮಟ್ಟದ ಸಮಿತಿಗಳ ಪುನರ್ರಚನೆ ಆಗಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸ್ಮಶಾನ ಭೂಮಿ ಅಭಿವೃದ್ಧಿ, ಅಲ್ಪಸಂಖ್ಯಾತರ ಕಾಲನಿಗಳು ಅಭಿವೃದ್ಧಿ, ಮಾತೃಪೂರ್ಣ, ಮಾತೃಶ್ರೀ, ಅನ್ನಭಾಗ್ಯ, ಅನಿಲ ಭಾಗ್ಯ ಹಾಗೂ ನಗರೋತ್ಥಾನ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಮಾಹಿತಿಯನ್ನು ನಿಗದಿತ ಮಾದರಿಯಲ್ಲಿ ಹಾಗೂ ಸೂಕ್ತ ಟಿಪ್ಪಣಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕೂಡಲೇ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಪ್ರಶಾಂತ್ಕುಮಾರ್ ಮಿಶ್ರಾ, ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ, ಉಪ ವಿಭಾಗಾಧಿಕಾರಿ ಮುಹಮ್ಮದ್ ಝುಬೇರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.