ಗಂಭೀರ ಪ್ರಕರಣಗಳಲ್ಲಿ ಭಾಗಿ: ಆರೋಪಿಗೆ ಗುಂಡಿಕ್ಕಿ ಬಂಧನ

Update: 2019-06-04 17:42 GMT

ಬೆಂಗಳೂರು, ಜೂ.4: ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಮೇಲೆ ಪೊಲೀಸರು ಪಿಸ್ತೂಲಿನಿಂದ ಗುಂಡು ಹಾರಿಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಡಿಯೂರು ಮೂಲದ ಶಶಾಂಕ್ ಎಂಬಾತ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅತ್ತಿಬೆಲೆ ಠಾಣಾ ಪೊಲೀಸರು ತಿಳಿಸಿದ್ದಾರೆ.

ಕೋಣನಕುಂಟೆ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಎರಡು ಕೊಲೆ, ಮೂರು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಶಾಂಕ್, ಇಲ್ಲಿನ ಅತ್ತಿಬೆಲೆ ವ್ಯಾಪ್ತಿಯ ಬಳ್ಳೂರು ಗೇಟ್ ಬಳಿ ರಾತ್ರಿ 11 ಗಂಟೆ ಸಮಯದಲ್ಲಿ ಬೈಕ್‌ನಲ್ಲಿ ಹೋಗುತ್ತಿರುವ ಬಗ್ಗೆ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ಲಭಿಸಿದೆ ಎನ್ನಲಾಗಿದೆ.

ಬಳಿಕ, ತನಿಖಾಧಿಕಾರಿಗಳು, ಸ್ಥಳಕ್ಕೆ ತೆರಳಿದ್ದಾರೆ. ಆರೋಪಿಯನ್ನು ಹಿಡಿಯಲು ಮುಂದಾದ ಪೊಲೀಸ್ ಪೇದೆ ಪ್ರಕಾಶ್ ಅವರ ಕೈಗೆ ಚಾಕುವಿನಿಂದ ಇರಿದು ಶಶಾಂಕ್ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಅವರು ಶರಣಾಗುವಂತೆ ಎಚ್ಚರಿಸಿದರಾದರೂ ಶಶಾಂಕ್ ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ಶಶಾಂಕ್ ಕಾಲಿಗೆ ತಗುಲಿ ಕುಸಿದು ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ತಕ್ಷಣ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News