ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ: ಶಾಸಕ ಅಪ್ಪಚ್ಚು ರಂಜನ್ ಕರೆ

Update: 2019-06-11 12:18 GMT

ಮಡಿಕೇರಿ, ಜೂ.11: ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕಾಗಿ ವೈಜ್ಞಾನಿಕ ರೂಪದಲ್ಲಿ ಹಸಿ ಮತ್ತು ಒಣಕಸವನ್ನಾಗಿ ಬೇರ್ಪಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕರೆ ನೀಡಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣ ಸ್ವಚ್ಛ ಭಾರತ ಅಭಿಯಾನ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನ ಜಾಗೃತಿ’ ಕಾರ್ಯಕ್ರಮದಲ್ಲಿ ‘ಭಿತ್ತಿಪತ್ರ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಒಣ ಕಸವಾದ ತ್ಯಾಜ್ಯ ಕಾಗದ, ಗಾಜಿನ ಬಾಟಲು, ಪ್ಲಾಷ್ಟಿಕ್ ಚೀಲ, ಟೆಟ್ರಾ ಪ್ಯಾಕ್, ಲೋಹದ ಕ್ಯಾನ್ ಗಳು, ಹಸಿ ಕಸವಾದ ಮನೆಯ ತ್ಯಾಜ್ಯ, ತೆಂಗಿನ ಚಿಪ್ಪು, ಹೂ ಗಳು, ಒಡೆದ ಮೊಟ್ಟೆ ಚಿಪ್ಪು, ಎಲೆಗಳು ಮತ್ತಿತರವನ್ನು ವಿಂಗಡಿಸಿ ಕಸವನ್ನು ಎರೆ ಹುಳು ಗೊಬ್ಬರವನ್ನಾಗಿ ಮಾಡಬೇಕು ಎಂದರು. 

ಉತ್ತಮ ಪರಿಸರ ಹಾಗೂ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಸ್ವಚ್ಛತೆ ಇದ್ದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಕಸ ಮತ್ತು ಪ್ಲಾಸ್ಟಿಕ್‍ನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸದ ತೊಟ್ಟಿಗಳಲ್ಲಿ ಹಾಕಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸಬೇಕು ಎಂದು ಅವರು ಕರೆ ನೀಡಿದರು. ನಮ್ಮ ಮನಸ್ಸನ್ನು ಸ್ವಚ್ಛವಾಗಿಟ್ಟುಕೊಂಡರೆ ಇತರರ ಮನಸ್ಸನ್ನು ಸ್ವಚ್ಛತೆಯಿಂದ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ. ಎಲ್ಲರೂ ಕೈಜೋಡಿಸುವಂತಾಗಬೇಕು ಎಂದರು. 

ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ಎರೆಹುಳು ಗೊಬ್ಬರ ಮಾಡಬೇಕು. ಕುಶಾಲನಗರದಲ್ಲಿ ಪ್ರವಾಸಿಗರಿಗೆ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಬಳಿ ಗೃಹ ಮಂಡಳಿಗೆ ಜಾಗ ನೀಡಿದವರು ಯಾರು, ಹಾಗೆಯೇ 800 ಮರಗಳ ಹನನಕ್ಕೆ ಅನುಮತಿ ಕೊಟ್ಟವರಾರು ಎಂದು ಶಾಸಕರು ಪ್ರಶ್ನಿಸಿದರು. ಆದರೆ ಯಾರೋ ಮಾಡಿದ ತಪ್ಪಿನಿಂದ ಇನ್ನೊಬ್ಬರ ಮೇಲೆ ಕೆಸರು ಎರಚುವ ಕೆಲಸ ಮಾಡಬಾರದು ಎಂದು ಅವರು ಹೇಳಿದರು. ಅಮೇರಿಕಾ, ಸಿಂಗಾಪುರ, ದುಬೈನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವಂತಿಲ್ಲ. ಅಷ್ಟರ ಮಟ್ಟಿಗೆ ಶುಚಿಯಾಗಿರುತ್ತದೆ. ಆದರೆ ಆ ದೇಶಗಳಿಂದ ಭಾರತಕ್ಕೆ ಇಳಿದ ತಕ್ಷಣ ಎಲ್ಲವೂ ಮಾಯವಾಗುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.  

ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ, ಪ್ರತಿಯೊಬ್ಬರ ಮನೆಯಲ್ಲಿಯೂ ಶೌಚಾಲಯ ಕಡ್ಡಾಯವಾಗಿ ಇರಬೇಕು ಮತ್ತು ಬಳಕೆ ಮಾಡಬೇಕು. ಛತ್ತೀಸ್‍ಘಢ ರಾಜ್ಯದಲ್ಲಿ ಪ್ರತಿಯೊಂದು ಪುಟ್ಟ ಮನೆಯಲ್ಲಿಯೂ ಶೌಚಾಲಯ ಇರುವುದನ್ನು ಕಾಣಬಹುದಾಗಿದೆ ಎಂದರು. ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನಜಾಗೃತಿ ಸಂಬಂಧಿಸಿದಂತೆ ಸ್ಲೈಡ್ ಶೋ ಮೂಲಕ ಮಾಹಿತಿ ನೀಡುವಂತೆ ಲೋಕೇಶ್ವರಿ ಗೋಪಾಲ್ ಅವರು ಸಲಹೆ ಮಾಡಿದರು. 

ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ, ಸ್ವಚ್ಛ ಮೇವ ಜಯತೇ ಆಂದೋಲನವು ಜಿಲ್ಲೆಯ 104 ಗ್ರಾಮ ಪಂಚಾಯತ್‍ಗಳಲ್ಲಿ ಒಂದು ತಿಂಗಳ ಕಾಲ ಗ್ರಾಮಸ್ಥರ ಸಹಕಾರದಲ್ಲಿ ಜನ ಜಾಗೃತಿ ಹಾಗೂ ಇದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದರ ಮೂಲಕ ನಡೆಯಲಿದೆ ಎಂದರು. 

ಗ್ರಾಮೀಣ ಸಮುದಾಯಕ್ಕೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಮಾಡುವ ಬಗ್ಗೆ ಮಾಹಿತಿ ನೀಡುವುದು, ವೈಯಕ್ತಿಕ ಸಮುದಾಯ ಮತ್ತು ಸಾಂಸ್ಥಿಕ ಶೌಚಾಲಯಗಳ ನಿರ್ವಹಣೆ ಮಾಡುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ನೀಡುವುದು, ಜಲಾಮೃತ ಹಾಗೂ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕುರಿತು ಕಾರ್ಯಕ್ರಮ ಹಮ್ಮಿಕೊಂಡು ಶಾಲೆ, ಅಂಗನವಾಡಿ, ಸರ್ಕಾರಿ ಜಾಗದಲ್ಲಿ ಹಾಗೂ ನರೇಗಾ ಯೋಜನೆಯಡಿಯಲ್ಲಿ ಗಿಡ ನಡುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. 

ಜಲ ಸಂರಕ್ಷಣ ಹಾಗೂ ಪರಿಸರ ಸಂರಕ್ಷಣೆ ಅಂಗವಾಗಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ 500 ರಿಂದ 1500 ಸಸಿಗಳನ್ನು ನೆಟ್ಟು ಪೋಷಿಸುವಂತೆ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನಾಂದೋಲನ ಜನಜಾಗೃತಿ ಅಂಗವಾಗಿ ಒಂದು ಲಕ್ಷ ಗಿಡಗಳನ್ನು ನೆಡಲಾಗುತ್ತದೆ. ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ, ಗ್ರಾ.ಪಂ.ಗಳು ಹಾಗೂ ಕಚೇರಿಗಳಲ್ಲಿ ಗೋಡೆ ಬರಹ ಬರೆಸಲಾಗುತ್ತದೆ ಎಂದರು.

ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿದ ವಿವಿಧ ಮಾದರಿಗಳನ್ನು ತಯಾರಿಸುವ ಸ್ಪರ್ಧೆಗಳನ್ನು ಶಾಲೆಗಳಲ್ಲಿ ಏರ್ಪಡಿಸಿ ಬಹುಮಾನ ನೀಡುವಂತೆ ಕ್ರಮತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 40 ಗ್ರಾಮ ಪಂಚಾಯತ್‍ಗಳನ್ನು ತ್ಯಾಜ್ಯ ನಿರ್ವಹಣೆಗೆ ಆಯ್ಕೆಗೊಳಿಸಿಕೊಂಡಿದೆ ಎಂದು ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ತಿಳಿಸಿದರು. 

ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನಜಾಗೃತಿ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಗ್ರೀನ್ ಸಿಟಿ ಫೊರಂ ಮತ್ತಿತರ ಸರ್ಕಾರೇತರ ಸಂಸ್ಥೆಗಳು ಸಹ ಕೈಜೋಡಿಸಿವೆ ಎಂದು ಸಿಇಒ ಅವರು ತಿಳಿಸಿದರು. ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಅವರು ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನ ಜಾಗೃತಿ ಕುರಿತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 

ಸಾಹಿತಿ, ರಂಗಕರ್ಮಿ, ನಾಟಕಕಾರ ಗಿರೀಶ್ ಕಾರ್ನಾಡ್ ಅವರ ನಿಧನ ಹಿನ್ನೆಲೆ ಸಂತಾಪ ಸೂಚಿಸಲಾಯಿತು. ಗ್ರೀನ್ ಸಿಟಿ ಫೊರಂ ಸ್ಥಾಪಕ ಅಧ್ಯಕ್ಷರಾದ ಚೆಯ್ಯಂಡ  ಸತ್ಯ, ಮೊಂತಿ ಗಣೇಶ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ ಅವರು ಸ್ವಾಗತಿಸಿದರು. ನಗರದ ಸಂತ ಜೋಸೆಫರ ಶಾಲೆಯ ವಿದ್ಯಾರ್ಥಿನೀಯರು ಪರಿಸರ ಗೀತೆ ಹಾಡಿದರು. ಮನೋಜ್ ನಿರೂಪಿಸಿದರು. ಗುಡೂರು ಭೀಮಸೇನ ವಂದಿಸಿದರು. 

ಸ್ವಚ್ಚತಾ ರಥಕ್ಕೆ ಚಾಲನೆ
ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಜನ ಜಾಗೃತಿ ಕಾರ್ಯಕ್ರಮದ ಸ್ವಚ್ಛತಾ ರಥಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಂಗಳವಾರ ಚಾಲನೆ ನೀಡಿದರು. ಸ್ವಚ್ಛತಾ ರಥ ವಾಹನವು ಜುಲೈ, 10 ರವರೆಗೆ ಸಂಚರಿಸಲಿದೆ. ಜಿಲ್ಲೆಯ ಮೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಸ್ವಚ್ಛತಾ ರಥದ ಮುಖಾಂತರ ಜಾಗೃತಿ ಮೂಡಿಸಲಾಗುತ್ತದೆ. 

ಜಲಾಮೃತ ಪರಿಸರ ದಿನಾಚರಣೆ, ಪರಿಸರ ಸಂರಕ್ಷಣೆ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ತ್ಯಾಜ್ಯ ವಿಂಗಡಣೆ ಬಗ್ಗೆ ಜಾಗೃತಿ ಹಾಗೂ 41 ಗ್ರಾಮ ಪಂಚಾಯತ್ ಗಳಲ್ಲಿ ತ್ಯಾಜ್ಯ ನಿರ್ವಹಣೆಯ ಅನುಷ್ಟಾನಗೊಳಿಸಲು ಚಾಲನೆ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಶುಚಿತ್ವ, ಕೈ ತೊಳೆಯುವ ಮಹತ್ವ, ಕಿಶೋರಿಯರಿಗೆ ಆರೋಗ್ಯ ಮಾಹಿತಿ ಹಾಗೂ ತ್ಯಾಜ್ಯದಿಂದ ವಿವಿಧ ಮಾದರಿಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತಿ ಗ್ರಾ.ಪಂ. ಆವರಣದಲ್ಲಿ ಮತ್ತು ಪ್ರತಿ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗೋಡೆ ಬರಹ ಚಿತ್ರ ಬರೆಯುವುದು. 
ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಸಹಾಯಕ ಕಾರ್ಯದರ್ಶಿ ಶ್ರೀಕಂಠ ಮೂರ್ತಿ, ಗ್ರೀನ್ ಸಿಟಿ ಫೋರಂ ಸ್ಥಾಪಕ ಅಧ್ಯಕ್ಷರಾದ ಚೆಯ್ಯಂಡ ಸತ್ಯ ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News