ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ: ಬಿಬಿಎಂಪಿ ಮೇಯರ್ ಸ್ಪಷ್ಟನೆ

Update: 2019-06-11 16:56 GMT

ಬೆಂಗಳೂರು, ಜೂ.11: ಈಗಾಗಲೇ ಸಾಕಷ್ಟು ಮಂದಿ ತೆರಿಗೆ ಕಟ್ಟಿರುವುದರಿಂದ ಹೆಚ್ಚುವರಿ ತೆರಿಗೆಯನ್ನು ಸಂಗ್ರಹಿಸುವುದು ಕಷ್ಟವಾಗುತ್ತದೆ. ಅದಕ್ಕಾಗಿ ಸದ್ಯ ತೆರಿಗೆ ಹೆಚ್ಚಳವನ್ನು ಮಾಡುತ್ತಿಲ್ಲ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗ ಅರ್ಧದಲ್ಲಿ ತೆರಿಗೆ ಹೆಚ್ಚಳ ಮಾಡಿದರೆ ಸಾರ್ವಜನಿಕರ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ತೆರಿಗೆ ಹೆಚ್ಚಳ ಮಾಡುವ ಪ್ರಸ್ತಾಪವನ್ನು ಕೈ ಬಿಡುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಗರದ ಆಸ್ತಿ ಮಾಲಕರಿಗೆ ಬಿಬಿಎಂಪಿ ತಾತ್ಕಾಲಿಕ ರಿಲೀಫ್ ನೀಡಿದ್ದು, ಮನೆಗಳಿಗೆ ಶೇ.25, ವಾಣಿಜ್ಯ ಕಟ್ಟಡಗಳಿಗೆ ಶೇ.30ರಷ್ಟು ತೆರಿಗೆ ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿದ್ದರಿಂದ ಹಿಂದೆ ಬಂದಿದೆ. ತೆರಿಗೆ ಹೆಚ್ಚಳ ಮಾಡುವ ಸಂಬಂಧ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ ಮುಂದಾಗಿತ್ತು. ಆದರೆ, ಪ್ರಸಕ್ತ ಆರ್ಥಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಗೆ ಹೊರೆಯಾಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಸದ್ಯಕ್ಕೆ ತೆರಿಗೆ ಹೆಚ್ಚಳ ಮಾಡದಿರಲು ನಿರ್ಧರಿಸಲಾಗಿದೆ.

ಈಗಾಗಲೇ ಶೇ.50ರಷ್ಟು ಜನರು ತೆರಿಗೆ ಪಾವತಿಸಿದ್ದಾರೆ. ಈಗ ಮಧ್ಯಂತರ ತೆರಿಗೆ ಹೆಚ್ಚಳ ಮಾಡಿದರೆ ಜನರ ವಿರೋಧ ಎದುರಿಸಬೇಕಾಗುತ್ತದೆ ಎಂಬ ಕಾರಣದಿಂದ ತೆರಿಗೆ ಹೆಚ್ಚಳ ಪ್ರಸ್ತಾಪವನ್ನು ಬಿಬಿಎಂಪಿ ಆಡಳಿತ ಪಕ್ಷ ಕೈಬಿಟ್ಟಿದ್ದು, 2020ನೆ ವರ್ಷಕ್ಕೆ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಕಳೆದ ಮೂರು ವರ್ಷಗಳಿಂದ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲಾಗಿಲ್ಲ. ಕೆಎಂಸಿ ಕಾಯ್ದೆ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡುವುದು ಮಾಮೂಲು. ಅನಿವಾರ್ಯ ಕಾರಣಗಳಿಂದ ಈ ಸಾಲಿನಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ತೆರಿಗೆ ಹೆಚ್ಚಳದ ಸುಳಿವು ನೀಡಿದ್ದರು.

ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್ ಕೂಡ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮರ್ಥಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News