ಕೊಲೆಯತ್ನ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ
Update: 2019-06-13 21:38 IST
ಉಡುಪಿ, ಜೂ.13: ಬಂಟ್ವಾಳ ತಾಲೂಕಿನ ಪುದು ಗ್ರಾಪಂ ಸದಸ್ಯ ಹಾಗೂ ಮೀನಿನ ವ್ಯಾಪಾರಿ ಕೆ.ಮುಹಮ್ಮದ್ ರಿಯಾಝ್ (34) ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಆರೋಪಿ ಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಪರಂಗಿಪೇಟೆಯ ಇಸ್ಮಾಯಿಲ್(45), ಆತನ ಸಹೋದರ ಮುಹ್ಮಮದ್ ಗೌಸ್(35), ಮುನೀರ್(25) ಎಂಬವರನ್ನು ಇಂದು ಉಡುಪಿಯ ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಇವರನ್ನು ಜೂ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಉಳಿದ ಇಬ್ಬರು ಆರೋಪಿಗಳಾದ ಮುಹಮ್ಮದ್ ಕೈಸರ್(60) ಹಾಗೂ ಅನ್ವರ್(25) ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಉಳಿದ ಆರೋಪಿ ಗಳ ಶೋಧ ಕಾರ್ಯ ಮುಂದುವರೆದಿದ್ದು, ಈವರೆಗೆ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.