ಆಸ್ಪತ್ರೆಯಲ್ಲಿ ವೈದ್ಯರ ಸುರಕ್ಷತೆ ಕೋರಿದ ಅರ್ಜಿ ಇಂದು ವಿಚಾರಣೆ

Update: 2019-06-17 18:41 GMT

ಹೊಸದಿಲ್ಲಿ, ಜೂ.17: ದೇಶದಾದ್ಯಂತ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಖಾತರಿಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜೂನ್ 18ರಂದು ನಡೆಸಲಿದೆ.

ಅರ್ಜಿಯ ತ್ವರಿತ ವಿಚಾರಣೆ ನಡೆಸಬೇಕೆಂಬ ಅರ್ಜಿದಾರರ ಪರ ವಕೀಲರ ಕೋರಿಕೆಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸೂರ್ಯಕಾಂತ್ ಅವರಿದ್ದ ರಜಾಕಾಲದ ನ್ಯಾಯಪೀಠವು ಜೂನ್ 18ರಂದು ವಿಚಾರಣೆಗೆ ಎತ್ತಿಕೊಳ್ಳಲು ನಿರ್ಧರಿಸಿದೆ. ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದಿರುವ ಹಲ್ಲೆಯ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ಶುಕ್ರವಾರ ಸಲ್ಲಿಸಲಾಗಿದೆ.

ದೇಶದಾದ್ಯಂತದ ಸರಕಾರಿ ಅಧೀನದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರಿಗೆ ಸುರಕ್ಷೆ ಮತ್ತು ಭದ್ರತೆ ಖಾತರಿಗೊಳಿಸಲು ಸರಕಾರದಿಂದ ನೇಮಕವಾಗಿರುವ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ವ್ಯವಹಾರ ಸಚಿವಾಲಯ, ಆರೋಗ್ಯ ಇಲಾಖೆ ಮತ್ತು ಪಶ್ಚಿಮ ಬಂಗಾಳ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News