×
Ad

ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಗೂಂಡಾಗಳಿಂದ ಹಲ್ಲೆ

Update: 2019-06-21 22:20 IST

ಪಾಂಡವಪುರ, ಜೂ.21: ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಸ್ವಗ್ರಾಮದಲ್ಲೇ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಲಾಗಿದ್ದು, ಘಟನೆಯಲ್ಲಿ 6 ರಿಂದ 7 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿಯಲ್ಲಿ ನಡೆದಿದೆ ಎನ್ನಲಾಗಿದೆ.

ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ 20 ಮಂದಿ ಗೂಂಡಾಗಳು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿನಕುರಳಿ ಗ್ರಾಮದ ಬಿಸಿಎಂ ಹಾಸ್ಟೆಲ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾರ್ಡನ್ ಶಿವರಾಜು ಹಾಗೂ ಅಡುಗೆ ಸಹಾಯಕ ನಂದೀಶ್, ಹೊರಗುತ್ತಿಗೆ ನೌಕರೆ ಪದ್ಮಮ್ಮ ಎಂಬುವವರು ಹುಳು ಮಿಶ್ರಿತ ಆಹಾರ ನೀಡಿದ್ದನ್ನು ಪ್ರಶ್ನಿಸಿ ಮೇಲಾಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಗೂಂಡಾಗಳಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.

ಹಾಸ್ಟೆಲ್ ವಾರ್ಡನ್ ಹಾಗೂ ಅಡುಗೆ ಸಹಾಯಕರ ಕುಮ್ಮಕ್ಕಿನಿಂದ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ದೌರ್ಜನ್ಯ ನಡೆಸಿ ಹಲ್ಲೆ ನಡೆಸಲಾಗಿದ್ದು, ಸಿಸಿ ಟಿವಿಯಲ್ಲಿ ಇದು ದಾಖಲಾಗಿದೆ. ಹೀಗಾಗಿ ಈ ಕೂಡಲೇ ಇವರನ್ನು ಅಮಾನತ್ತು ಮಾಡಬೇಕು. ಜತೆಗೆ ಗೂಂಡಾಗಳ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಎಂದು ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳು ವಾರ್ಡನ್ ಶಿವರಾಜು, ಅಡುಗೆ ಸಹಾಯಕ ನಂದೀಶ್ ವಿರುದ್ಧ ದೂರು ನೀಡಿದ್ದ ಮೇರೆಗೆ ವಿದ್ಯಾರ್ಥಿಗಳ ದೂರಿನ ಹಿನ್ನೆಲೆ ಹಾಸ್ಟೆಲ್‍ಗೆ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಬಿಸಿಎಂ ಇಲಾಖೆಯ ಜಿಲ್ಲಾಧಿಕಾರಿ ಎನ್.ರಾಣಿ ಗುರುವಾರ ತಡರಾತ್ರಿ ಹಾಸ್ಟೆಲ್ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೇ, ಹಾಸ್ಟೆಲ್ ವಾರ್ಡನ್ ಶಿವರಾಜು ಹಾಗೂ ಅಡುಗೆ ಸಹಾಯಕಿ ಪದ್ಮಮ್ಮ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಪಾಂಡವಪುರ ಟೌನ್ ಹಾಸ್ಟೆಲ್ ವಾರ್ಡನ್ ಆನಂದಕುಮಾರ್ ಅವರನ್ನು ನಿಯೋಜಿಸಲಾಗಿದೆ. ಜತೆಗೆ ಹಾಸ್ಟೆಲ್ ಬಳಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ ಎಂದರು.

ವಿದ್ಯಾರ್ಥಿಗಳ ಜತೆಯಲ್ಲಿ ತಾವು ಗೂಂಡಾಗಳ ವಿರುದ್ಧ ಸಿಸಿ ಟಿವಿ ದೃಶ್ಯಾವಳಿಗಳನ್ನಾಧರಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಬಗ್ಗೆ ಮಾತುಕತೆ ನಡೆಸಲಾಗಿದ್ದು, ವಿದ್ಯಾರ್ಥಿಗಳು ಹೆದರಿದ ಹಿನ್ನೆಲೆಯಲ್ಲಿ ಘಟನೆ ಕುರಿತು ದೂರು ಸಲ್ಲಿಸದಿರಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News