ತನ್ವೀರ್ ಸೇಠ್ ಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರಿಂದ ಈಶ್ವರ್ ಖಂಡ್ರೆಗೆ ಮುತ್ತಿಗೆ

Update: 2019-06-23 15:31 GMT

ಮೈಸೂರು,ಜೂ.23: ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಿದರು.

ನಗರದ ಕಾಂಗ್ರಸ್ ಭವನದಲ್ಲಿ ರವಿವಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರನ್ನು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮುತ್ತಿಗೆ ಹಾಕಿ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು.

ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಮನವಿ ಸಲ್ಲಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಪಕ್ಷದ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಅಭಿವೃದ್ದಿ ದೃಷ್ಟಿಯಿಂದ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ನಂತರ ಈಶ್ವರ್ ಖಂಡ್ರೆ ಮಾತನಾಡಿ, ತನ್ವೀರ್ ಸೇಠ್ ಸಚಿವ ಸ್ಥಾನಕ್ಕೆ ಸಮರ್ಥರಿದ್ದು, ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಪಕ್ಷನ್ನು ಉತ್ತಮ ರೀತಿಯಲ್ಲಿ ಸಂಘಟಿಸುತ್ತಿದ್ದಾರೆ. ಯಾರೂ ಪಕ್ಷದ ವಿರುದ್ಧ ನಡೆದುಕೊಳ್ಳಬಾರದು. ನೀವ್ಯಾರೂ ರಾಜೀನಾಮೆಗೆ ಮುಂದಾಗಬಾರದು. ನಿಮ್ಮ ಮನವಿಯನ್ನು ನಾನು ಕಾಂಗ್ರೆಸ್ ಹೈಕಮಾಂಡ್‍ಗೆ ತಿಳಿಸುತ್ತೇನೆ. ಅವರ ತೀರ್ಮಾನ ಏನೇ ಆಗಿದ್ದರೂ ಅದನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾಂಗ್ರೆಸ್ ಮುಖಂಡ ಡಾ.ಡಿ.ತಿಮ್ಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News