ಭ್ರೂಣಪತ್ತೆ ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದರೆ ಬಹುಮಾನ: ದ.ಕ. ಡಿಸಿ ಸಸಿಕಾಂತ್ ಸೆಂಥಿಲ್

Update: 2019-06-24 14:21 GMT

ಮಂಗಳೂರು, ಜೂ.24: ಕಾನೂನಿನ ವಿರುದ್ಧವಾಗಿ ಭ್ರೂಣಲಿಂಗ ಪತ್ತೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಹಿತಿ ನೀಡಿದವರಿಗೆ 10 ಸಾವಿರ ರೂ. ಹಾಗೂ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭ್ರೂಣಹತ್ಯೆ ಕಾನೂನುಬಾಹಿರ ಚಟುವಟಿಕೆಯಾಗಿದ್ದರೂ ಇಂತಹ ಘಟನೆಗಳು ವರದಿಯಾಗುತ್ತಿವೆ. ಸ್ಕಾನಿಂಗ್ ಸೆಂಟರ್‌ಗಳಿಗೆ ಸಾಮಾನ್ಯರಂತೆ ತೆರಳಿ ಪರಿಶೀಲನೆ ನಡೆಸುವಂತೆ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗರ್ಭಿಣಿಯರ ನಿಖರವಾದ ಮಾಹಿತಿಯನ್ನು ಅಂಗನವಾಡಿ ಕೇಂದ್ರದಿಂದ ಪಡೆದುಕೊಳ್ಳಬೇಕು. ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ದೊರಕಬೇಕಾದ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆಯಿಂದ ನಡೆಯುವಂತಹ ಜನಪರ ಕಾರ್ಯಕ್ರಮಗಳ ಕುರಿತು ಆನ್‌ಲೈನ್ ಪ್ರಚಾರ ನಡೆಸಿ ಬಡತನದಲ್ಲಿರುವಂತಹವ ಜನತೆಗೆ ನೇರವಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ, ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ನೆರವು ದೊರಕುತ್ತಿದೆ. ಸಾಗಣೆಗೆ ಒಳಪಟ್ಟ ಮಹಿಳೆಯರ ಹಾಗೂ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಪುನರ್ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಅಲ್ಪಾವಧಿ ಗೃಹ ಹಾಗೂ ಸಾಂತ್ವನ ಕೇಂದ್ರಗಳ ಸೌಲಭ್ಯ ದೊರಕುತ್ತಿದೆ ಎಂದು ಅವರು ತಿಳಿಸಿದರು.

ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಹಾಗೂ ಮಕ್ಕಳ ರಕ್ಷಣೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲಾಖೆಯಿಂದ ದೊರಕುವಂತಹ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಜನತೆಗೆ ತಿಳಿಯಪಡಿಸಬೇಕು ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಸಿಖಂದರ್ ಪಾಶಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸುಂದರ ಪೂಜಾರಿ, ವೆನ್‌ಲಾಕ್ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಸಂರಕ್ಷಣಾ ಕಾಯ್ದೆ ಅನುಷ್ಠಾನ
ದೌರ್ಜನ್ಯಕ್ಕೊಳಗಾದ ಮಹಿಳೆಗೆ ಒಂದೇ ಸೂರಿನಡಿ, ಸಮಗ್ರ ಸೌಲಭ್ಯ (ವೈದ್ಯಕೀಯ, ಪೊಲೀಸ್ ನೆರವು) ಒದಗಿಸಲು ವಿಶೇಷ ‘ಗೆಳತಿ’ ಚಿಕಿತ್ಸೆ ಘಟಕದ ಸೌಲಭ್ಯ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯಲ್ಲಿ ದೊರಕುತ್ತಿದೆ. ಜತೆಗೆ ಕುಟುಂಬದೊಳಗಾಗುವ ಯಾವುದೇ ಬಗೆಯ ಹಿಂಸೆಗೊಳಗಾದ ಮಹಿಳೆಯರಿಗೆ ಸಂಬಂಧಿಸಿದಂತೆ ಹೆಚ್ಚು ಸಂರಕ್ಷಣೆ ಒದಗಿಸುವ ಹಿನ್ನೆಲೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ಸಂರಕ್ಷಣಾ ಕಾಯ್ದೆ ಅನುಷ್ಠಾನಗೊಂಡಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News