ಮಹಿಳಾಪರ ಯೋಜನೆ ಸಾಮಾನ್ಯರಿಗೂ ತಲುಪಲಿ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

Update: 2019-06-24 14:24 GMT

ಮಂಗಳೂರು, ಜೂ.24: ಮಹಿಳೆಯರಿಗೆ ಸಂಬಂಧಿಸಿದ ಸರಕಾರದ ಪ್ರತಿಯೊಂದು ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಮಹಿಳೆಗೂ ದೊರಕಬೇಕು. ಯಾವುದೇ ಮಹಿಳೆ ಯೋಜನೆಯಿಂದ ವಂಚಿತರಾಗದಂತೆ, ಅವರಿಗೆ ಸರಿಯಾದ ಸಮಯದಲ್ಲಿ ದೊರಕುವಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದ ಅಧಿಕಾರಿಗಳಿಂದ ಮಹಿಳೆಯರಿಗೆ ಸಂಬಂಧಿಸಿದ ಕುಂದು-ಕೊರತೆ ಮತ್ತು ಸಮಸ್ಯೆಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಸರಕಾರದಿಂದ ಲಭಿಸುವ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ದೊರಕುವಂತೆ ಮಾನವೀಯ ದೃಷ್ಟಿಕೊನದಲ್ಲಿ ಕ್ರಮ ಕೈಗೊಳ್ಳಬೇಕು. ಸಾಮಾನ್ಯ ಮಹಿಳೆಯರಿಗೂ ಸರಕಾರದ ಯೋಜನೆಗಳ ಲಾಭ ದೊರಕುವಂತೆ ಜಿಲ್ಲಾ ಮಟ್ಟದ ಸಮಿತಿಗಳು ಮಹಿಳಾ ಸಬಲೀಕರಣ ಹಾಗೂ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಮಾತನಾಡಿ, ಪ್ರಧಾನಮಂತ್ರಿ ಮಹಿಳಾ ಶಕ್ತಿ ಕೇಂದ್ರ ಜಿಲ್ಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಮೂವರು ಮಹಿಳೆಯರನ್ನು ಸಂಯೋಜಕರಾಗಿ ನೇಮಿಸಲಾಗಿದೆ. ಅವರ ಜೊತೆ ಮಹಿಳಾ ಕಲ್ಯಾಣ ಅಧಿಕಾರಿಯನ್ನು ಮಹಿಳಾ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಪ್ರಾರಂಭವಾಗಿದೆ ಎಂದು ಹೇಳಿದರು.

ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳಾಗಿವೆ. ಅದರ ಜೊತೆಗೆ ಜಿಲ್ಲಾ ಮಟ್ಟದಲ್ಲಿ ‘ಸಖೀ ಕೇಂದ್ರ’ದಲ್ಲಿ ಸಂತ್ರಸ್ತ ಮಹಿಳೆಯರಿಗೆ ಕಾನೂನು ನೆರವು, ಚಿಕಿತ್ಸೆ, ಭದ್ರತೆ ಮತ್ತು ಒಂದೇ ಸೂರಿನ ಅಡಿಯಲ್ಲಿ ಮೂಲಸೌಕರ್ಯ ದೊರಕುತ್ತಿದೆ ಎಂದರು.

ಸಭೆಯಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಸಿಖಂದರ್ ಪಾಶಾ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು, ಎನ್‌ಜಿಒಗಳು, ಮಹಿಳಾ ಸಂಘ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಆರು ಬಾಲ್ಯವಿವಾಹ ಪ್ರಕರಣ

ಸಖೀ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 48 ಲಕ್ಷ ರೂ. ಬಿಡುಗಡೆಯಾಗಿದ್ದು, ಸ್ವಾದಾರ ಗೃಹದಲ್ಲಿ 13 ಮಂದಿ ಮಹಿಳಾ ಮಾನಸಿಕ ರೋಗಿಗಳಿದ್ದಾರೆ. ಈ ರೋಗಿಗಳಿಗೆ ಎಲ್ಲ ರೀತಿಯ ಚಿಕಿತ್ಸೆಗಳು ಲಭಿಸುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಒಂದು ಗಂಡು ಹಾಗೂ ಐವರು ಹೆಣ್ಣು ಮಕ್ಕಳ ಸೇರಿದಂತೆ ಒಟ್ಟು ಆರು ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಜಿಲ್ಲಾಧಿಕಾರಿಯ ಗಮನಕ್ಕೆ ತಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News