ಸಾರಿಗೆ ಬಸ್ ಪ್ರಯಾಣ ದರ ಏರಿಕೆ: ಸೂಕ್ತ ಸಮರ್ಥನೆ ಒದಗಿಸಲು ಸಿಎಂ ಸೂಚನೆ

Update: 2019-06-24 16:12 GMT

ಬೆಂಗಳೂರು, ಜೂ. 24: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸೇಲ್ ಬೆಲೆ ಹೆಚ್ಚಾಗಿದ್ದರೂ, ನಾಲ್ಕು ವರ್ಷಗಳಿಂದ ಬಸ್ ದರ ಹೆಚ್ಚಿಸದೆ ಇರುವ ಹಿನ್ನೆಲೆಯಲ್ಲಿ ಬಸ್ ದರವನ್ನು ಏರಿಸಬೇಕೆಂಬ ಸಾರಿಗೆ ಇಲಾಖೆ ಪ್ರಸ್ತಾವ ಕುರಿತು ಸಮಾಲೋಚನೆ ನಡೆಸಿದರು.

ಸಂಸ್ಥೆ ಮತ್ತಷ್ಟು ಜನಸ್ನೇಹಿ: ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಾಗೂ ನಗರದಲ್ಲಿ ಎಲೆಕ್ಟ್ರಿಕಲ್ ಬಸ್‌ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಿದ್ಧ ಉಡುಪು ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್‌ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಕಾರ್ಮಿಕರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ಬಸ್‌ಪಾಸ್ ಅನ್ನು ರಿಯಾಯತಿ ದರದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯನ್ನು ಸಂಪೂರ್ಣ ಡಿಜಿಟಲಿಕರಣಕ್ಕೆ ಕ್ರಮಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್.ಎ.ಹಾರಿಸ್ ತಿಳಿಸಿದರು. ಹೊಸ ಬಸ್ ಖರೀದಿ, ಹೊಸ ಬಸ್ ನಿಲ್ದಾಣ/ಡಿಪೋಗಳ ನಿರ್ಮಾಣ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಾರಿಗೆ ಸಚಿವ ಡಿ.ಸಿ.ತಮಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News