ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮರುಜೀವ: ಡಾ.ಜಿ.ಪರಮೇಶ್ವರ್

Update: 2019-06-25 13:47 GMT

ಬೆಂಗಳೂರು, ಜೂ.25: ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮರು ಜೀವ ನೀಡಲಿದ್ದು, ಅದಕ್ಕೆ ಅಧಿಕಾರ ನೀಡಿ, ನಗರದ ಎಲ್ಲ ಕೆರೆಗಳ ನಿರ್ವಹಣೆ ಮಾಡುವ ಅಧಿಕಾರವನ್ನು ಪ್ರಾಧಿಕಾರಕ್ಕೆ ವಹಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬಿಡಿಎ ವ್ಯಾಪ್ತಿಯಲ್ಲಿರುವ 10 ಕೆರೆಗಳನ್ನು ಬಿಬಿಎಂಪಿ ವ್ಯಾಪ್ತಿಗೆ ನೀಡುವ ಸಂಬಂಧ ಬಿಎಂಆರ್‌ಡಿಎ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ಹಾಗೂ ಬಿಡಿಎ ಕೆರೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಪ್ರತ್ಯೇಕ ಸಮಯ ಹಾಗೂ ಅನುದಾನ ಮೀಸಲಿಡಬೇಕು. ಈ ಹಿಂದೆ ಕೆರೆ ಅಭಿವೃದ್ಧಿ ಪ್ರಾಧಿಕಾರ ತರಲಾಗಿತ್ತು. ಆನಂತರದ ದಿನಗಳಲ್ಲಿ ಈ ಪ್ರಾಧಿಕಾರದ ಅಧಿಕಾರವನ್ನು ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪ್ರಸ್ತುತ ಈ ಪ್ರಾಧಿಕಾರ ಯಾವುದೇ ಚಟುವಟಿಕೆ ನಡೆಸುತ್ತಿಲ್ಲ ಎಂದು ಹೇಳಿದರು. ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮೊದಲಿನ ಅಧಿಕಾರ ವಾಪಾಸ್ ನೀಡುವುದಲ್ಲದೆ, ನಿರ್ವಹಣೆಯ ಜವಾಬ್ಧಾರಿಯನ್ನು ಹಾಗೂ ಇಂತಿಷ್ಟು ಅನುದಾನ ಮೀಸಲಿಟ್ಟು ಪ್ರಾಧಿಕಾರಕ್ಕೆ ಮರುಹುಟ್ಟು ನೀಡಬೇಕಿದೆ. ಕೆಲವೇ ತಿಂಗಳಲ್ಲಿ ಪ್ರಾಧಿಕಾರವನ್ನು ಪುನರ್ ರಚಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೂ ಬಿಡಿಎ ವ್ಯಾಪ್ತಿಯ 10 ಕೆರೆಗಳನ್ನು ಬಿಬಿಎಂಪಿಗೆ ಹಸ್ತಾಂತರಿಸದೇ ತನ್ನಲ್ಲಿಯೇ ಇಟ್ಟುಕೊಳ್ಳುವಂತೆ ಸೂಚಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸವಿರುವ ನಿವೇಶನ ರಹಿತ ಎಸ್ಸಿ-ಎಸ್ಟಿ ಸಮುದಾಯದ ಬಡವರಿಗೆ ನಿವೇಶನ ಮಂಜೂರು ಮಾಡುವ ಸಂಬಂಧ ಚರ್ಚಿಸಲಾಯಿತು. ಖಾಲಿ ನಿವೇಶನ ಗುರುತಿಸಿ, ಕೂಡಲೇ ಈ ಪ್ರಸ್ತಾವವನ್ನು ಸಚಿವ ಸಂಪುಟದಲ್ಲಿ ಮುಂದಿಟ್ಟು ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬಿಡಿಎ ಆಯುಕ್ತರಾದ ಮಂಜುಳ ಸೇರಿದಂತೆ ಹಲವು ಅಧಿಕಾರಿಗಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News