ಬೀದಿ ನಾಯಿಗಳ ಹಾವಳಿಗೆ 5 ವರ್ಷದ ಬಾಲಕ ಬಲಿ

Update: 2019-06-25 14:39 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.25: ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಮರುಕಳಿಸಿದ್ದು, 5 ವರ್ಷದ ಪುಟ್ಟ ಬಾಲಕ ಬೀದಿ ನಾಯಿಗಳ ಅಟ್ಟಹಾಸಕ್ಕೆ ಬಲಿಯಾಗಿರುವ ಘಟನೆ ಇಲ್ಲಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನಿವಾಸಿ ಮಲ್ಲಪ್ಪ ಹಾಗೂ ಅನಿತಾ ದಂಪತಿಯ ಮೂರನೇ ಪುತ್ರ ದುರ್ಗೇಶ್(5) ಎಂಬವನೇ ಮೃತ ಬಾಲಕ ಎಂದು ತಿಳಿದುಬಂದಿದೆ.

ಕೆಲಸ ಅರಸಿ ಬೆಂಗಳೂರಿಗೆ ಬಂದ ದಂಪತಿ ಸಾಸ್ವೆಘಟ್ಟ ಗ್ರಾಮದಲ್ಲಿ ನೆಲೆಸಿದ್ದರು. ಕಳೆದ ನಾಲ್ಕು ವರ್ಷದಿಂದ ಬೆಂಗಳೂರಿನಲ್ಲಿ ಕಟ್ಟಡದ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ದುರ್ಗೇಶ್‌ನ ತಾಯಿ ಗರ್ಭಿಣಿಯಾಗಿದ್ದು, ಅವರು ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಮಂಗಳವಾರ ಇಲ್ಲಿನ ಸೋಲದೇವನಹಳ್ಳಿಯ ಅಂಚೆಪಾಳ್ಯದ ಬಳಿ ಬಹು ಮಹಡಿ ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗಿದ್ದ ತಂದೆ ಬಳಿಗೆ ದುರ್ಗೇಶ್ ಹೋಗುತ್ತಿದ್ದಾಗ ದಾರಿ ಮಧ್ಯೆ ಬೀದಿ ನಾಯಿಗಳ ಗುಂಪು ಏಕಾಏಕಿ ದಾಳಿ ಮಾಡಿವೆ. ಪರಿಣಾಮ ದುರ್ಗೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News