ವಾಲ್ಮೀಕಿ ಸಮುದಾಯದ ಮುಖಂಡರ ಜೊತೆ ಸಿಎಂ ಚರ್ಚೆ
Update: 2019-06-25 15:48 GMT
ಬೆಂಗಳೂರು, ಜೂ.25: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಂತೆ ಒತ್ತಾಯಿಸಿ, ವಾಲ್ಮೀಕಿ ಸಮುದಾಯದವರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಮುದಾಯದ ಮುಖಂಡರ ಜೊತೆ ನಗರದ ಖಾಸಗಿ ಹೊಟೇಲ್ನಲ್ಲಿ ಚರ್ಚೆ ನಡೆಸಿದರು.
1956 ರಲ್ಲಿದ್ದ ಜನಸಂಖ್ಯೆಯನ್ನು ಆಧರಿಸಿ ಎಸ್ಟಿಗೆ ಶೇ.3ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಈಗ ಸಮುದಾಯದ ಜನಸಂಖ್ಯೆ ಶೇ.7.5ರಷ್ಟಿದ್ದು, ಅದರ ಆಧಾರದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ಮುಖ್ಯಮಂತ್ರಿಗೆ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಈ.ತುಕಾರಾಂ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಶಾಸಕರಾದ ಕಂಪ್ಲಿ ಗಣೇಶ್, ಬಿ.ನಾಗೇಂದ್ರ, ಪ್ರತಾಪ್ ಗೌಡ ಪಾಟೀಲ್, ಮಹೇಶ್ ಕುಮಟಳ್ಳಿ, ಅನಂತ ನ್ಯಾಮಗೌಡ, ಮುನಿರತ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.