ಮಾದಕ ವ್ಯಸನದಿಂದ ದೂರವಿರೋಣ

Update: 2019-06-25 18:30 GMT

ನಮ್ಮ ಇಂದಿನ ನಾಗರಿಕ ಜೀವನಶೈಲಿಯಲ್ಲಿ ಮೋಜು, ಮಸ್ತಿ, ತಡ ರಾತ್ರಿಯ ಪಾರ್ಟಿ ಇತ್ಯಾದಿಗಳು ಮಾಮೂಲಿಯಾಗಿವೆ. ಈ ಹಂತದಲ್ಲಿ ಹದಿ ಹರೆಯದ ಯುವ ಜನತೆ ದಾರಿ ತಪ್ಪುವುದು ಸಾಮಾನ್ಯ. ಈ ದಿಸೆಯಲ್ಲಿ ತಂದೆ ತಾಯಂದಿರ ಆಸರೆ, ಮಾರ್ಗದರ್ಶನ ಅತೀ ಅಗತ್ಯ. ಹದಿ ಹರೆಯದಲ್ಲಿ ಮಕ್ಕಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯದಿದ್ದಲ್ಲಿ ಅನಾಹುತವಾಗುವ ಸಾಧ್ಯತೆಯಿದೆ.

ಜೂನ್ 26ರಂದು ವಿಶ್ವಾದ್ಯಂತ ‘ಮಾದಕವಸ್ತು ವಿರೋಧಿ ದಿನ’ ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.
ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಬಹಳ ಸ್ಪರ್ಧಾತ್ಮಕವಾಗಿದೆ. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ ಒತ್ತಡದ, ಧಾವಂತದ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ, ಯುವ ಜನತೆ ವೇಗಕ್ಕೆ ತಕ್ಕಂತೆ ತಾಳ ಹಾಕಲು ಕಷ್ಟವಾಗಿ ತಪ್ಪುದಾರಿ ಹಿಡಿಯುತ್ತಾರೆ ಎಂದರೂ ತಪ್ಪಲ್ಲ. ನಮ್ಮ ಇಂದಿನ ನಾಗರಿಕ ಜೀವನಶೈಲಿಯಲ್ಲಿ ಮೋಜು, ಮಸ್ತಿ, ತಡ ರಾತ್ರಿಯ ಪಾರ್ಟಿ ಇತ್ಯಾದಿಗಳು ಮಾಮೂಲಿಯಾಗಿವೆ. ಈ ಹಂತದಲ್ಲಿ ಹದಿ ಹರೆಯದ ಯುವ ಜನತೆ ದಾರಿ ತಪ್ಪುವುದು ಸಾಮಾನ್ಯ. ಈ ದಿಸೆಯಲ್ಲಿ ತಂದೆ ತಾಯಂದಿರ ಆಸರೆ, ಮಾರ್ಗದರ್ಶನ ಅತೀ ಅಗತ್ಯ. ಹದಿ ಹರೆಯದಲ್ಲಿ ಮಕ್ಕಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯದಿದ್ದಲ್ಲಿ ಅನಾಹುತವಾಗುವ ಸಾಧ್ಯತೆಯಿದೆ.
ಅಪೀಮು, ಗಾಂಜಾ, ಕೋಕೇನ್, ಮರಿಜುವಾನಾ ಇವೆಲ್ಲಾ ಮಾದಕ ವಸ್ತುಗಳ ಸೇವನೆ ನಮ್ಮ ದೇಶಗಳಲ್ಲಿ ಶತಶತಮಾನಗಳಿಂದ ಇದೆ. ಒಮ್ಮೆ ಇದರ ಚಟಕ್ಕೆ ಬಿದ್ದಲ್ಲಿ ಮತ್ತೆ ಹೊರಬರುವುದು ಬಹಳ ಕಷ್ಟ. ಅಭ್ಯಾಸ ಬಲದಿಂದ ಮತ್ತೆ ಮತ್ತೆ ಮಾಡುವ ಕೆಲಸವನ್ನು ಚಟ ಎನ್ನುತ್ತೇವೆ. ಸಾಮಾನ್ಯವಾಗಿ ಚಟಗಳೆಲ್ಲಾ ದುಶ್ಚಟಗಳೇ. ಆ ವ್ಯಕ್ತಿಗೆ ಹಾಗೆಂದು ಗೊತ್ತಿದ್ದರೂ ಅದನ್ನು ಮತ್ತೆ ಮತ್ತೆ ಮಾಡುತ್ತಿರುತ್ತಾನೆ. ಇದಕ್ಕೆ ಮುಖ್ಯ ಕಾರಣ, ಅದನ್ನು ನಿಲ್ಲಿಸಿದರೆ ಆತನಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ಹಿಂಸೆಯಾಗುತ್ತದೆ. ಹೀಗಾಗಿ ಹೇಗೋ ಆತನಿಗೆ ಅಂಟಿಕೊಂಡ ಚಟಗಳು ಅವನನ್ನು ಬಿಡದೆ ಆವರಿಸಿಕೊಂಡಿರುತ್ತದೆ.


 ಅಪೀಮು ಎನ್ನುವುದು ಗಸಗಸೆಯಿಂದ ತಯಾರು ಮಾಡಲಾದ, ಔಷಧಿಯ ಗುಣವುಳ್ಳ ವಸ್ತು. ಅಪೀಮಿನಿಂದ ತಯಾರಾದ Morphine  (ಮಾರ್ಪಿನ್) ಎನ್ನುವ ಶುದ್ಧ ರಾಸಾಯನಿಕ ವಸ್ತುವನ್ನು, ಇಂದಿಗೂ ವೈದಕೀಯ ಶಾಸ್ತ್ರದಲ್ಲಿ ನೋವುನಿವಾರಕ ಚುಚ್ಚುಮದ್ದಿನ ರೂಪದಲ್ಲಿ ಬಳಸಲಾಗುತ್ತದೆ. ಅಪಘಾತದಲ್ಲಿ ಪೆಟ್ಟುಬಿದ್ದು ತೀವ್ರ ಸ್ಪರೂಪದ ನೋವಿರುವಾಗ, ಹೃದಯಘಾತವಾಗಿ ಅತಿಯಾದ ಎದೆನೋವು ಇದ್ದಲ್ಲಿ ನೋವು ನಿವಾರಕವಾಗಿ ಇಂದಿಗೂ ಬಳಸಲಾಗುತ್ತದೆ. ಇದರಿಂದ ಸಣ್ಣ ಪ್ರಮಾಣದಲ್ಲಿ ನಿದ್ದೆಬರಬಹುದು. ಅಪೀಮಿನಿಂದ ತಯಾರಿಸಲಾದ ಹೆರಾಯಿನ್ ಎಂಬ ಮಾದಕವಸ್ತು ಕೂಡಾ ಪಾಶ್ಚಾತ್ಯ ದೇಶಗಳಲ್ಲಿ ಹೇರಳವಾಗಿ ಬಳಕೆಯಲ್ಲಿದೆ. ಇದರಿಂದ ಶರೀರದ ನೋವು, ಬಳಲಿಕೆ, ಮಾನಸಿಕ ದುಗುಡ ಕಡಿಮೆಯಾಗಿ ಕ್ಷಣಿಕವಾಗಿ ಖುಷಿ ಸಿಗುತ್ತದೆ. ಮನಸ್ಸಿನ ಬೇಸರ, ನಿರಾಸೆ ಎಲ್ಲವೂ ತಗ್ಗಿ ನಿರಾಳವಾಗುತ್ತದೆ. ಈ ಕಾರಣದಿಂದಲೇ ಜನ ಹೆರಾಯಿನ್ ಚುಚ್ಚುಮದ್ದನ್ನು ಮತ್ತೆ ಮತ್ತೆ ಬಳಸುತ್ತಾರೆ. ಕ್ರಮೇಣ ಇದು ಚಟವಾಗಿ ಮಾರ್ಪಾಡಾಗುತ್ತದೆ. ಮತ್ತೆ ಮತ್ತೆ ತೆಗೆದುಕೊಳ್ಳಬೇಕೆಂಬ ತುಡಿತ ಉಂಟಾಗುತ್ತದೆ. ತೆಗೆದುಕೊಳ್ಳದಿದ್ದಲ್ಲಿ withdrwal syndrome  ಉಂಟಾಗುತ್ತದೆ. ಮನುಷ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಹುಚ್ಚನಂತಾಗುತ್ತಾನೆ. ಹೆರಾಯಿನ್ ಬಳಕೆಯಿಂದ ಲೈಂಗಿಕ ಆಸೆ ಹೆಚ್ಚಾಗುತ್ತದೆ. ಆದರೆ ಲೈಂಗಿಕ ಸಾಮರ್ಥ್ಯ ಕುಗ್ಗುತ್ತದೆ. ಈಗೀಗ ನಮ್ಮ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಮಾದಕ ವಸ್ತುಗಳ ಬಳಕೆ ಎಂದರೂ ತಪ್ಪಲ್ಲ. ಒಟ್ಟಿನಲ್ಲಿ ಅಪೀಮು ಎನ್ನುವುದು ಔಷಧೀಯ ಗುಣವುಳ್ಳ ಮಾದಕವಸ್ತು ಇದರ ಚಟಕ್ಕೆ ಹದಿಹರೆಯದ ಯುವಕರು ಬಿದ್ದಲ್ಲಿ ಮತ್ತೆ ಹೊರ ಬರುವುದು ಬಹಳ ಕಷ್ಟ.
ಇನ್ನು ‘ಗಾಂಜಾ’ದ ವಿಷಯಕ್ಕೆ ಬರೋಣ. ಇದು ಕೂಡಾ ಸಸ್ಯ ಮೂಲದಿಂದಲೇ ಬಂದಂತಹ ಇನ್ನೊಂದು ಮಾದಕವಸ್ತು. ಈಗೀಗ ಹಳ್ಳಿ ಹಳ್ಳಿಗಳಲ್ಲೂ ಇದನ್ನು ಅಕ್ರಮವಾಗಿ ಬೆಳೆಸುತ್ತಿದ್ದಾರೆ. ಸರಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೂ, ಜನರು ಅಕ್ರಮವಾಗಿ ಬೆಳೆದು, ಹಣಮಾಡುವ ದಂದೆಯಲ್ಲಿ ತೊಡಗಿದ್ದಾರೆ. ಅದೇ ರೀತಿ ಸಸ್ಯಮೂಲದಿಂದ ಬಂದಿರುವ ಕೋಕೇನ್ (Cocaine) ಮರಿಜುವಾನಾ (Marisuana) ಮತ್ತು ಹಷೀಷ್ (Hashish Polydrug  abuse ) ಕೂಡಾ ಮಾದಕ ದ್ರವ್ಯಗಳೇ. ಈ ಮೇಲೆ ತಿಳಿಸಿದ ಎಲ್ಲಾ ವಸ್ತುಗಳ ಬಳಕೆಯಿಂದ ಮನಸ್ಸು ಉತ್ತೇಜಿತಗೊಳ್ಳುತ್ತದೆೆ. ಜೊತೆಗೆ ಒತ್ತಡದಿಂದ ಬಳಲಿದ ದೇಹ ಮತ್ತು ಮನಸ್ಸಿಗೆ ಭ್ರಮೆ ಮತ್ತು ಭ್ರಾಂತಿಗಳನ್ನು ಮಾಡಿಸುತ್ತದೆ. ಈ ಕಾರಣದಿಂದಲೇ ಅತೀವ ಒತ್ತಡ, ಹತಾಶೆ ಮತ್ತು ನಿರಾಶೆಯಿಂದ ಕೂಡಿದ ಯುವ ಜನರು ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಾರೆ. ಮೊದಮೊದಲು ಒಂದು ಮಾದಕ ದ್ರವ್ಯದ ಬಳಕೆ, ಬಳಿಕ ಎರಡು ಮೂರು ವಸ್ತುಗಳನ್ನು ಬಳಸತೊಡಗುತ್ತಾರೆ. ಇದನ್ನು ಎಂದು ಹೇಳುತ್ತಾರೆ.ಕಾಲಕ್ರಮೇಣ ಮಾದಕ ವಸ್ತುಗಳ ಬಳಕೆ ಜಾಸ್ತಿಯಾದಂತೆ, ಶರೀರದ ಒಂದೊಂದು ಅಂಗಗಳನ್ನು ಆಪೋಶನ ತೆಗೆದುಕೊಳ್ಳುತ್ತದೆ. ಕೆಲಸ ಮಾಡಲು ಅಶಕ್ತರಾಗಿ, ಗಳಿಕೆ ಇಲ್ಲದಂತಾಗಿ, ಮನೆಮಠ ಕಳೆದುಕೊಂಡು, ಹೆಂಡತಿ ಮಕ್ಕಳನ್ನು ಕಳೆದುಕೊಂಡು ಬೀದಿ ಪಾಲಾಗುತ್ತಾರೆ. ಚಟಕ್ಕೆ ದಾಸರಾಗಿ, ಮಾದಕ ದ್ರವ್ಯ ಸಿಗದಾದಾಗ ಹಣದ ಆವಶ್ಯಕತೆಗಾಗಿ ಕೊಲೆ, ಸುಲಿಗೆ, ಕಳ್ಳತನ ಮಾಡಲೂ ಹೇಸದ ಮನಃಸ್ಥಿತಿಗೆ ಬಂದು ತಲುಪುತ್ತಾರೆ. ಒಟ್ಟಿನಲ್ಲಿ ಮಾದಕ ದ್ರವ್ಯಗಳ ದಾಸನಾದವನನ್ನು ಚಟ ಬಿಡಿಸಿ ಸಮಾಜದ ಮುಖ್ಯವಾಹಿನಿಗೆ ತರುವುದು ಭಗೀರಥ ಪ್ರಯತ್ನವೆಂದರೂ ಸುಳ್ಳಲ್ಲ.


ಮುಕ್ತಾಯಕ್ಕೆ ಮುನ್ನ
ಇಂದಿನ ಜೀವನಶೈಲಿ, ಅತಿಯಾದ ಕೆಲಸದ ಒತ್ತಡ, ಸಂಬಂಧಗಳಲ್ಲಿನ ಭಾವನಾತ್ಮಕತೆಯ ಕೊರತೆ, ದಿನ ನಿತ್ಯದ ಜೀವನದಲ್ಲಿನ ಜಂಜಾಟಗಳು, ಯಾಂತ್ರೀಕೃತ ಬದುಕಿನ ನೋವು ಮತ್ತು ಸಂಕಟಗಳು, ದಿನನಿತ್ಯದ ವ್ಯವಹಾರದಲ್ಲಿನ ಆರ್ಥಿಕ ಏರು ಪೇರು, ಇವೆಲ್ಲವೂ ಮೇಳೈಸಿ ನಮ್ಮ ಮನಸ್ಸು ಮತ್ತು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ, ಮನುಷ್ಯ ಮಾನಸಿಕ ಖಿನ್ನತೆಗೆ ಬಲಿಯಾಗುತ್ತಾನೆ. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಬಲಿಯಾಗುತ್ತಿರುವವರ ಸಂಖ್ಯೆ ಬಹಳವಾಗಿದ್ದು, ಅದರಲ್ಲೂ ವಿಶೇಷವಾಗಿ ಇಂದು ನಮ್ಮ ಯುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಮಾದಕ ದ್ರವ್ಯಗಳ ದುಶ್ಚಟಗಳಿಗೆ ಬಲಿಯಾಗುವುದು ನಿಜಕ್ಕೂ ವಿಪರ್ಯಾಸ ಮತ್ತು ನಾಗರಿಕ ಜಗತ್ತಿನ ದುರಂತವೇ ಸರಿ. ಈ ದಿಸೆಯಲ್ಲಿ ಹಿರಿಯರೆಲ್ಲಾ ಸೇರಿ ಹದಿಹರೆಯದ ಚಂಚಲ ಮನಸ್ಸಿನ ಯುವ ಜನತೆಗೆ ಹೆಚ್ಚಿನ ಆತ್ಮ ವಿಶ್ವಾಸ ತುಂಬಬೇಕು. ಮತ್ತು ಒತ್ತಡ ನಿರ್ವಹಿಸಲು ಸಹಕರಿಸಬೇಕು. ಮತ್ತು ಮಾದಕ ವಸ್ತುಗಳ ಮೊರೆ ಹೋಗದಂತೆ ಸರಿಯಾದ ಮಾರ್ಗದರ್ಶನ ನೀಡಬೇಕು. ಹಾಗಾದಾಗ ಮಾತ್ರ ‘ವಿಶ್ವಮಾದಕ ದ್ರವ್ಯ ವಿರೋಧಿ ದಿನ’ ಆಚರಣೆಗೆ ಹೆಚ್ಚಿನ ಮೌಲ್ಯ ಬಂದೀತು.

ಮಾದಕ ವಸ್ತು ಚಟಕ್ಕೆ ಬೀಳದಂತೆ ತಡೆಗಟ್ಟುವುದು ಹೇಗೆ?
♦ ಹದಿಹರೆಯದಲ್ಲಿ ಬೆಳೆಯುವ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು.
♦ ಅತಿಯಾದ ಒತ್ತಡ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳನ್ನು ಅತಿಯಾದ ಮುದ್ದಿನಿಂದ ಬೆಳೆಸಬಾರದು. ನಮ್ಮ ನಿರೀಕ್ಷೆಗಳಿಗೆ ಕಡಿವಾಣ ಹಾಕಿ ಮಕ್ಕಳ ಮೇಲೆ ವಿಪರೀತ ಒತ್ತಡ ಬೀಳದಂತೆ ನೋಡಿಕೊಳ್ಳಬೇಕು.
♦ ಹದಿಹರೆಯದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಅನಗತ್ಯವಾಗಿ ಅವರಿಗೆ ಬೈದು, ಹೊಡೆದು, ಬುದ್ಧಿ ಹೇಳುವುದನ್ನು ಬಿಟ್ಟು, ಆಪ್ತಮಿತ್ರರಂತೆ ಅವರ ಕಷ್ಟ ಸುಖಗಳನ್ನು ವಿಚಾರಿಸುತ್ತಾ ಅವರಿಗೆ ಸೂಕ್ತ ಸಾಂತ್ವನ ಕೊಡಬೇಕು. ಇದು ತಂದೆ ತಾಯಿಂದಿರ ಆದ್ಯ ಧರ್ಮ.
♦ಮಕ್ಕಳ ಮೇಲೆ ಅತಿಯಾದ ನಿರೀಕ್ಷೆಗಳನ್ನು ಹೇರಿ, ಒತ್ತಡದ ಸನ್ನಿವೇಶಗಳನ್ನು ಮಾಡಿಕೊಡಬಾರದು. ತಮ್ಮ ಮಕ್ಕಳ ಸಾಮರ್ಥ್ಯ ಮತ್ತು ಬುದ್ಧಿವಂತಿಕೆಗಳ ಅರಿವು ಹೆತ್ತವರಿಗೆ ಇರಬೇಕು. ಅವರ ಸಾಮರ್ಥ್ಯ ಮತ್ತು ಬುದ್ಧಿಶಕ್ತಿಗೆ ಮೀರಿದ ಗುರಿಗಳನ್ನು ಸಾಧಿಸುವಂತೆ ಇವರಿಗೆ ಒತ್ತಡ ತಂದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು. ತಾವು ಸಾಧಿಸಲಾಗದ ಗುರಿಗಳನ್ನು ತಮ್ಮ ಮಕ್ಕಳಾದರೂ ಸಾಧಿಸಲಿ ಎಂಬ ಹುಂಬತನಕ್ಕೆ ಪ್ರಯತ್ನಿಸಲೇ ಬಾರದು.
♦ ಮಕ್ಕಳನ್ನು ಅತಿಯಾಗಿ ಮುದ್ದುಮಾಡಿ, ಕೈತುಂಬಾ ಹಣ ನೀಡಿ, ಕೇಳಿದ್ದೆಲ್ಲಾ ನೀಡಿದ್ದಲ್ಲಿ ದಾರಿ ತಪ್ಪುವ ಎಲ್ಲಾ ಸಾಧ್ಯತೆ ಇರುತ್ತದೆ. ಮಾಹಿತಿ ತಂತ್ರಜ್ಞಾನ, ಅಂತರ್ಜಾಲದ ದುರ್ಬಳಕೆಯಿಂದ, ಹದಿಹರೆಯದ ಮಕ್ಕಳು ಬಹುಬೇಗ ದಾರಿ ತಪ್ಪುವ ಸಾಧ್ಯತೆ ಇರುತ್ತದೆ. ಈ ದಿಸೆಯಲ್ಲಿ ಹೆತ್ತವರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ನಮ್ಮ ಮಕ್ಕಳ ಸಾಮರ್ಥ್ಯದ ಅರಿವಿನ ಜೊತೆಗೆ, ಹೆತ್ತವರು ತಮ್ಮ ಸ್ಥಾನಮಾನದ ಬಗ್ಗೆ ಹೆಚ್ಚು ಪ್ರಾಶಸ್ತ್ಯ ಕೊಡದೆ ಮಕ್ಕಳನ್ನು ಮಕ್ಕಳ ರೀತಿಯಲ್ಲಿ ಬೆಳೆಸಿದ್ದಲ್ಲಿ ಅವರು ಮುಂದೆ ಸಮಾಜದ ಸತ್ಪ್ರಜೆ ಆಗಬಹುದು.

Writer - ಡಾ. ಮುರಲಿ ಮೋಹನ್, ಚೂಂತಾರು

contributor

Editor - ಡಾ. ಮುರಲಿ ಮೋಹನ್, ಚೂಂತಾರು

contributor

Similar News

ಜಗದಗಲ
ಜಗ ದಗಲ