ಬಸವ ಕಲ್ಯಾಣ: ಮನೆ ಛಾವಣಿ ಕುಸಿದು 6 ಮಂದಿ ಮೃತಪಟ್ಟವರ ಕುಟುಂಬಕ್ಕೆ 24 ಲಕ್ಷ ರೂ. ಪರಿಹಾರಧನ ವಿತರಿಸಿದ ಸಿಎಂ
Update: 2019-06-27 08:10 GMT
ಬೀದರ್, ಜೂ.27: ಬಸವ ಕಲ್ಯಾಣದಲ್ಲಿ ಬುಧವಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ 6 ಜನರು ಮೃತಪಟ್ಟ ಮನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಭೇಟಿ ನೀಡಿ ಪರಿಹಾರದ 24 ಲಕ್ಷ ರೂ. ಚೆಕ್ ವಿತರಿಸಿ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 100 ವರ್ಷಕ್ಕೂ ಹಳೆಯದಾದ ಇಂತಹ ನೂರಾರು ಮನೆಗಳು ಇರುವ ಬಗ್ಗೆ ಮಾಹಿತಿ ದೊರೆತಿದೆ. ಅಂತಹ ಮನೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಬೀದರ್ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಲಾಗುವುದು. ಬಸವಕಲ್ಯಾಣ ತಾಲೂಕಿನಲ್ಲಿ 2 ಸಾವಿರ ಮನೆಗಳ ನಿರ್ಮಾಣಕ್ಕೆ ಆದೇಶಿಸಿದ್ದೇನೆ ಎಂದರು.
ಸಚಿವರಾದ ಬಂಡೆಪ್ಪ ಕಾಶೆಂಪೂರ್, ರಾಜಶೇಖರ ಪಾಟೀಲ್, ರಹೀಂ ಖಾನ್, ಶಾಸಕ ಬಿ. ನಾರಾಯಣ ರಾವ್ ಮತ್ತಿತರರು ಉಪಸ್ಥಿತರಿದ್ದರು.